ಶಿರಾ: ಶಿರಾ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಇಲ್ಲಿ ಬಂದು ಕುಳಿತರೂ ಜೆಡಿಎಸ್ ಗೆಲುವು ತಪ್ಪಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಸಿ. ಗೌರಿಶಂಕರ್ ಹೇಳಿದರು.
ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಹುಂಜನಾಳು ಗ್ರಾಮದಲ್ಲಿ ಶುಕ್ರವಾರ ಜೆಡಿಎಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿದರು. ಶಿರಾ ಕ್ಷೇತ್ರದ ಜನರು ಸ್ವಾಭಿಮಾನಿಗಳು. ಯಾವುದೇ ಕಾರಣಕ್ಕೂ ಬಿಜೆಪಿಯ ಅಮಿಷಗಳಿಗೆ ಬಲಿಯಾಗುವುದಿಲ್ಲ ಎಂದರು.
ಪಕ್ಷವನ್ನು ಕೆಲವು ಮುಖಂಡರು ಬಿಟ್ಟು ಹೋದರೂ, ಕಾರ್ಯಕರ್ತರು ಸದೃಢರಾಗಿ ಪಕ್ಷದ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಮತ್ತು ಬಿ.ಸತ್ಯನಾರಾಯಣ ಅವರ ಕೆಲಸವನ್ನು ಮೆಚ್ಚಿ ಜನ ನಮ್ಮ ಪರ ಒಲವು ತೋರಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ, ಅವರನ್ನು ತುಮಕೂರು ಗ್ರಾಮಾಂತರ ಪ್ರದೇಶದ ಜನರು ಈಗಾಗಲೇ ತಿರಸ್ಕರಿಸಿದ್ದಾರೆ. ಅವರು ಇಲ್ಲಿ ಬಂದು ಸುಳ್ಳು ಭರವಸೆ ನೀಡುತ್ತಿದ್ದಾರೆ. ಚುನಾವಣೆಗೆ ಮೊದಲು ಮದಲೂರು ಕೆರೆಗೆ ನೀರು ಹರಿಸುವುದಾಗಿ ಹೇಳಿದ್ದರು. ಏಕೆ ಹರಿಸಲಿಲ್ಲ? ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬರಲಿ ಅವರಿಗೆ ಅಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದರು.
ಮುಖಂಡರಾದ ಸಿ.ಆರ್.ಉಮೇಶ್, ಮುಡಿಮಡು ರಂಗಶ್ವಾಮಯ್ಯ, ಹುಂಜನಾಳು ರಾಜಣ್ಣ ಇದ್ದರು.
ಹುಲಿಕುಂಟೆ: ತಾಲ್ಲೂಕಿನ ಹುಲಿಕುಂಟೆ ಹೋಬಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಚುನಾವಣೆ ಪ್ರಚಾರ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.