ADVERTISEMENT

ಸದ್ಯ ಶಾಲೆ ಬಂದ್ ಮಾಡಲ್ಲ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 5:30 IST
Last Updated 30 ನವೆಂಬರ್ 2021, 5:30 IST
ಬಿ.ಸಿ. ನಾಗೇಶ್‌
ಬಿ.ಸಿ. ನಾಗೇಶ್‌   

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ರಾಜ್ಯದಲ್ಲಿ 48 ಸಾವಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿದ್ದು, ಯಾವ ಶಾಲೆಯಲ್ಲೂ ಮಕ್ಕಳಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವಂತೆ ಆರೋಗ್ಯವನ್ನೂ ಗಮನಿಸಲಾಗುತ್ತಿದೆ. ಪ್ರತಿ ಅರ್ಧ ಹಾಗೂ ಒಂದು ಗಂಟೆಗೆ ಒಮ್ಮೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ಶಿಕ್ಷಣ ಇಲಾಖೆ ವರದಿ ಪಡೆದುಕೊಳ್ಳುತ್ತಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ಜತೆಗೂ ಹಂಚಿಕೊಳ್ಳಲಾಗುತ್ತಿದೆ ಎಂದರು.

ADVERTISEMENT

ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು, ಬೆಂಗಳೂರು ಬಳಿಯ ವಸತಿ ಶಾಲೆಯಲ್ಲಿ ಕೋವಿಡ್ ದೃಢಪಟ್ಟಿದೆ. ಭಾನುವಾರ ಮೈಸೂರಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿವೆ. ಅದು ಬಿಟ್ಟರೆ ಪ್ರಾಥಮಿಕ ಶಾಲೆಗಳ ಹಂತದಲ್ಲಿ ಎಲ್ಲೂ ವರದಿಯಾಗಿಲ್ಲ. ಸಾಕಷ್ಟು ತಾಲ್ಲೂಕುಗಳಲ್ಲಿ ದೃಢ ಪ್ರಮಾಣ ಶೂನ್ಯಕ್ಕೆ ಇಳಿದಿದೆ.ಎಲ್ಲವನ್ನೂ ಪ್ರತಿ ದಿನವೂ ಗಮನಿಸಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.