ತುಮಕೂರು: ನಗರ ಡಿವೈಎಸ್ಪಿ ಶ್ರೀನಿವಾಸ್ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ.
ನಗರದ ಹೊರ ವಲಯದ ಯಲ್ಲಾಪುರದ ಬಳಿ ನಡೆದಿದ್ದ ಕೊಲೆ ಪ್ರಕರಣದ ವಿಚಾರಣೆಗಾಗಿ ಮೇ 20ರಂದು ಗ್ರಾಮಾಂತರ ಠಾಣೆಯ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದರು. ವಿಚಾರಣೆ ಮುಗಿದ ನಂತರ ವಾಪಸ್ ಕಳುಹಿಸಿದ್ದರು. ಮರು ದಿನ ಪೊಲೀಸರು ಮನೆಗೆ ಬಂದು ಮತ್ತೆ ಕರೆದುಕೊಂಡು ಹೋಗಿ 9 ದಿನಗಳ ಕಾಲ ವಿವಿಧ ಠಾಣೆಗಳಲ್ಲಿ ವಿಚಾರಣೆ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ ಡಿವೈಎಸ್ಪಿ ಶ್ರೀನಿವಾಸ್ ಇತರೆ ಪೊಲೀಸರನ್ನು ಠಾಣೆಯಿಂದ ಹೊರಗೆ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಮತ್ತೊಬ್ಬ ವ್ಯಕ್ತಿಯ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಸುಳ್ಳು ಪ್ರಕರಣ ದಾಖಲಿಸಲು ಸಹಕರಿಸಿದರೆ ಕೊಲೆ ಪ್ರಕರಣದಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು ಎಂಬುದಾಗಿ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಮಹಿಳೆ ಜೈಲು ಸೇರಿದ್ದು, ಜಾಮೀನಿನ ಮೇಲೆ ಹೊರ ಬಂದ ನಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ಕೊಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.