ADVERTISEMENT

ದೇಗುಲದ ಬಳಿ ಮಹಿಳೆ ಶವ ಪತ್ತೆ

ನಿಧಿಗಾಗಿ ಬಲಿ ಶಂಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 3:26 IST
Last Updated 5 ಜುಲೈ 2021, 3:26 IST
ನಿಧಿಗಾಗಿ ದೇವರ ವಿಗ್ರಹದ ಮುಂದೆ ಅಗೆಯಲಾಗಿದೆ. ಸಮೀಪವೇ ಶವ ಸಿಕ್ಕಿದೆ
ನಿಧಿಗಾಗಿ ದೇವರ ವಿಗ್ರಹದ ಮುಂದೆ ಅಗೆಯಲಾಗಿದೆ. ಸಮೀಪವೇ ಶವ ಸಿಕ್ಕಿದೆ   

ತುಮಕೂರು: ತಾಲ್ಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆಯೇ ಬೆಟ್ಟದ ಮೇಲಿನ ದೇವಾಲಯದ ಬಳಿ ಸುಮಾರು 35ರಿಂದ 40 ವರ್ಷದ ಮಹಿಳೆ ಕೊಲೆಯಾಗಿರಬಹುದು ಎಂದು ಗ್ರಾಮಸ್ಥರು ಅನುಮಾನ ಪಟ್ಟಿದ್ದಾರೆ.

ದೇವಾಲಯದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗದಲ್ಲಿ ನಿಧಿಗಾಗಿ ಅಗೆಯಲಾಗಿದೆ. ಶವದ ಸಮೀಪ ಅರಿಶಿನ, ಕುಂಕುಮ ಚೆಲ್ಲಾಡಿದ್ದು, ಪೂಜೆ ಸಲ್ಲಿಸಿರುವ ದೃಶ್ಯಗಳಿವೆ. ಹಾಗಾಗಿ ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆ ಮೂಡಿದೆ.

ADVERTISEMENT

ಕುರಿಗಾಹಿಗಳು ಶನಿವಾರ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು, ದೇವಾಲಯದ ಅಕ್ಕಪಕ್ಕ ನೋಡಿದಾಗ ಮಹಿಳೆಯ ಕೂದಲು ಕಂಡು ಬಂದಿದೆ. ನಂತರ ಮೃತದೇಹ ಸಂಪೂರ್ಣ ಗುರುತು ಸಿಗದಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕುರಿಗಾಹಿಗಳು ದೇವಾಲಯದ ಬಳಿ ಶವ ಬಿದ್ದಿರುವ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗಾಬರಿಗೊಂಡ ಗ್ರಾಮಸ್ಥರು ಸ್ಥಳಕ್ಕೆ ಬಂದು ಖಚಿತಪಡಿಸಿಕೊಂಡ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಇದು ಕೊಲೆಯೊ ಅಥವಾ ಆತ್ಮಹತ್ಯೆಯೊ ಎಂಬುದು ತಿಳಿಯಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಅನುಮಾನಕ್ಕೆ ಕಾರಣ: ಎಂ.ಗೊಲ್ಲಹಳ್ಳಿ ಬೆಟ್ಟದ ಮೇಲಿರುವ ಆಂಜನೇಯಸ್ವಾಮಿ ದೇವಾಲಯದ ಬಳಿ ಆಗಿಂದಾಗ್ಗೆ ನಿಧಿಗಾಗಿ ಕಿಡಿಗೇಡಿಗಳು ಅಗೆದು ದೇಗುಲದ ಆವರಣವನ್ನು ಹಾಳು ಮಾಡುತ್ತಿರುತ್ತಾರೆ. ಈಗಲೂ ಅದೇ ರೀತಿ ಆಗಿದೆ ಎನ್ನುತ್ತಾರೆ ಗ್ರಾಮದ ಚಿದಂಬರ.

ದೇವಾಲಯ ಬೆಟ್ಟದ ಮೇಲಿರುವ ಕಾರಣ ಗ್ರಾಮಸ್ಥರು ಯಾರೂ ಆ ಕಡೆ ಸುಳಿಯುತ್ತಿರಲಿಲ್ಲ. ಹುಣ್ಣಿಮೆ, ಅಮಾವಾಸ್ಯೆಗಳಂದು ಪೂಜೆ ನಡೆಯುತ್ತದೆ. ಪೊಲೀಸರ ತನಿಖೆಯಿಂದಷ್ಟೆ ಸತ್ಯ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.