ADVERTISEMENT

ವಸಂತನರಸಾಪುರಕ್ಕೆ ಎತ್ತಿನಹೊಳೆ ನೀರು: ಇನ್ನೂ ನಿರ್ಧರಿಸಿಲ್ಲ ಎಂದ ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 15:33 IST
Last Updated 6 ಜೂನ್ 2020, 15:33 IST
ಜೆ.ಸಿ.ಮಾಧುಸ್ವಾಮಿ
ಜೆ.ಸಿ.ಮಾಧುಸ್ವಾಮಿ   

ತುಮಕೂರು: ವಸಂತನರಸಾಪುರ ಕೈಗಾರಿಕಾಪ್ರದೇಶಕ್ಕೆ ಎತ್ತಿನಹೊಳೆ ಯೋಜನೆಯಡಿ ನೀರು ಹಂಚಿಕೆ ಸಂಬಂಧ ಚರ್ಚೆಗಳು ಆಗುತ್ತಿವೆ. ಆದರೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶನಿವಾರ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದರು.

ಕೊಳಚೆ ನೀರನ್ನು ಸಂಸ್ಕರಿಸಿ ಕೈಗಾರಿಕೆಗಳಿಗೆ ಪೂರೈಸಲು ನಿರ್ಧಾರ ಕೈಗೊಳ್ಳಲಾಗುತ್ತಿದೆ. ಕೆಐಡಿಬಿ ಹಾಗೂ ಬೆಂಗಳೂರು ಜಲಮಂಡಳಿಯನ್ನು ಉಪಯೋಗಿಸಿಕೊಂಡು ಪೀಣ್ಯ, ಡಾಬಸ್‍ಪೇಟೆ, ಮಾಗಡಿ ಭಾಗಕ್ಕೆ ಬೆಂಗಳೂರಿನ ನೀರು ಪೂರೈಸಲು ನಿರ್ಧರಿಸಲಾಗಿದೆ. ಅದೇ ರೀತಿ ತುಮಕೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೈಗಾರಿಕಾ ಪ್ರದೇಶಕ್ಕೆ ಪೂರೈಕೆ ಮಾಡಿದರೆ ನೀರಿನ ಸಮಸ್ಯೆ ಪರಿಹರಿಸಬಹುದು ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್, ‘ವಸಂತನರಸಾಪುರ ಕೈಗಾರಿಕಾ ಪ್ರದೇಶವನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ಬಂಡವಾಳ ಹೂಡಿಕೆಯ ವಲಯ ಎಂದು ಘೋಷಿಸಿದೆ. ಮುಂದಿನ ವರ್ಷಗಳಲ್ಲಿ ದಕ್ಷಿಣ ಕರ್ನಾಟಕದಲ್ಲಿಯೇ ಇಲ್ಲಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇಲ್ಲಿನ ಕಾರ್ಮಿಕರಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಶೀಘ್ರದಲ್ಲಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ಟೆಕ್ನೊ ಸ್ಪಾರ್ಕ್‍ನ ಮೋಹನ್ ಸುರೇಶ್, ವಸಂತನರಸಾಪುರ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿ.ರಾಮಮೂರ್ತಿ, ಟಿಡಿಸಿಸಿಐ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಸಿ.ವಿ.ಹರೀಶ್, ಜಂಟಿ ಕಾರ್ಯದರ್ಶಿ ಎಂ.ಸತ್ಯನಾರಾಯಣ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗೇಶ್, ಕೆಐಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ತಬ್ಸುಮ್ ಜಹೇರಾ, ಡಿವೈಎಸ್‍ಪಿ ತಿಪ್ಪೇಸ್ವಾಮಿ, ಅಭಿವೃದ್ಧಿ ಅಧಿಕಾರಿ ಸುನೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.