ADVERTISEMENT

ಯವಶಕ್ತಿಯಿಂದ ಸಮ ಸಮಾಜ ನಿರ್ಮಾಣ

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 16:33 IST
Last Updated 7 ಡಿಸೆಂಬರ್ 2018, 16:33 IST
ತುಮಕೂರಿನ ಗಾಜಿನ ಮನೆ ಗುಬ್ಬಿ ವೀರಣ್ಣ ವೇದಿಕೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ ಬಳಿಕ  ಮೂಡಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಲಾ ತಂಡದ ಕಲಾವಿದರು ಪ್ರಸ್ತುತ ಪಡಿಸಿದ ಗಾನ ನೃತ್ಯ ಸಂಭ್ರಮದ ನೋಟ
ತುಮಕೂರಿನ ಗಾಜಿನ ಮನೆ ಗುಬ್ಬಿ ವೀರಣ್ಣ ವೇದಿಕೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ ಬಳಿಕ  ಮೂಡಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಲಾ ತಂಡದ ಕಲಾವಿದರು ಪ್ರಸ್ತುತ ಪಡಿಸಿದ ಗಾನ ನೃತ್ಯ ಸಂಭ್ರಮದ ನೋಟ   

ತುಮಕೂರು: ‘ನಮ್ಮ ನಾಡಿನಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಮೆರೆಯುವಂತಾಗಬೇಕು’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಶಿಸಿದರು.

ನಗರದ ಗಾಜಿನ ಮನೆಯ ಗುಬ್ಬಿ ವೀರಣ್ಣ ವೇದಿಕೆಯಲ್ಲಿ ಶುಕ್ರವಾರ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.

‘ಯುವ ಪ್ರತಿಭೆಗಳು ಈಗಾಗಲೇ ನಾಡಿಗೆ ಹೆಮ್ಮೆ ತರುವ ರೀತಿ ಸಾಧನೆ ಮಾಡಿದ್ದಾರೆ. ಅವರಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯದ ಅಭಿರುಚಿ ಬೆಳೆಸಲು ಇಂತಹ ಉತ್ಸವ ಸಹಕಾರಿಯಾಗಿದೆ’ ಎಂದರು.

ADVERTISEMENT

‘ದೇಶದ ಜನಸಂಖ್ಯೆಯಲ್ಲಿ ಶೇ 60ರಷ್ಟು ಯುವಕರೇ ಇದ್ದಾರೆ. ಈ ಯುವ ಶಕ್ತಿ ದೇಶದ ಅಭಿವೃದ್ಧಿ, ಸಮಾನತೆಯ ಸಮಾಜ ಕಟ್ಟಲು ಸದ್ಬಳಕೆ ಆಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ‘ನಮ್ಮದು ಯುವಶಕ್ತಿಯ ರಾಷ್ಟ್ರ. ಯುವ ಪ್ರತಿಭೆಗಳ ಅನಾವರಣಕ್ಕೆ ಇಂತಹ ವೇದಿಕೆಗಳು ಅವಶ್ಯ. ಇಲ್ಲದೇ ಇದ್ದರೆ ಪ್ರತಿಭೆಗಳಷ್ಟೇ ಅಲ್ಲ. ನಮ್ಮ ಕಲೆ, ಸಂಸ್ಕೃತಿಯೂ ನಶಿಸುತ್ತದೆ’ ಎಂದು ನುಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಯುವ ಶಕ್ತಿಯನ್ನು ಯುವ ದೈವೋಭವ ಎಂದು ಕರೆದಿದ್ದಾರೆ. ಯುವಕರೇ ದೇಶದ ಬಲಿಷ್ಠ ಶಕ್ತಿ ಎಂಬುದು ಅವರ ನಂಬಿಕೆಯಾಗಿದೆ’ ಎಂದು ಹೇಳಿದರು.

‘ದೇಶದಲ್ಲಿ 80 ಕೋಟಿಯಷ್ಟು ಯುವಕರೇ ಇದ್ದಾರೆ. ಅವರನ್ನು ಸನ್ಮಾರ್ಗದಲ್ಲಿ ನಡೆಸದೇ ಇದ್ದರೆ ದೇಶವೇ ಛಿದ್ರವಾಗುತ್ತದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್, ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ವೇದಿಕೆಯಲ್ಲಿದ್ದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.