ಉಡುಪಿ: ಮಲ್ಪೆ ಮತ್ತು ಪಡುಕೆರೆ ಕಡಲ ಕಿನಾರೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಬೆಂಗಳೂರು, ಉಡುಪಿ ನಿರ್ಮಿತಿ ಕೇಂದ್ರ ಆಯೋಜಿಸಿರುವ ‘ಉಡುಪಿ ಪರ್ಬ’ ಹಾಗೂ ‘ಸಾಹಸ ಉತ್ಸವ’ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಈ ವರೆಗೆ ಸುಮಾರು ₹22 ಕೋಟಿಯನ್ನು ಈ ಕಡಲ ಕಿನಾರೆ ಅಭಿವೃದ್ಧಿಪಡಿಸಲು ವೆಚ್ಚ ಮಾಡಲಾಗಿದೆ. ಸುಮಾರು ₹75 ಲಕ್ಷ ವೆಚ್ಚದ ಸ್ವಚ್ಛತಾ ಯಂತ್ರ ನಮ್ಮಲ್ಲಿ ಇದೆ, ಭಾರತ್ ದರ್ಶನ ಯೋಜನೆಯಲ್ಲಿಯೂ ಸುಮಾರು ₹12 ಕೋಟಿ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.
ಕ್ರೀಡೆ ಹಾಗೂ ಯುವ ಸಬಲೀಕರಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಜತೆಗೂಡಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದೆ. ಇದರಿಂದ ಪ್ರವಾಸೋದ್ಯಮ ಹಾಗೂ ಸಾಹಸ ಕ್ರೀಡೆಗಳೀಗೆ ಪ್ರೋತ್ಸಾಹ ಸಿಗಲಿದೆ ಎಂದು ಅವರು ಹೇಳಿದರು.
ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಭಾಷ್ಚಂದ್ರ, ಕ್ರೀಡಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಿರ್ದೇಶಕ ಅನುಪಮ್ ಅಗರ್ವಾಲ್. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಆರ್. ಅನಿತಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.