ADVERTISEMENT

ಕನ್ನಡ ಶಾಲೆ ಉಳಿಸುವುದು ಅಗತ್ಯ: ಶಾಸಕ ಸುನಿಲ್

​ಪ್ರಜಾವಾಣಿ ವಾರ್ತೆ
Published 1 ಜನವರಿ 2014, 10:09 IST
Last Updated 1 ಜನವರಿ 2014, 10:09 IST

ಕಾರ್ಕಳ: ‘ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು ಕನ್ನಡ ಶಾಲೆಗಳನ್ನು ನಾವು ಉಳಿಸಿಕೊಳ್ಳಬೇಕಾಗಿದೆ’ ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು. ತಾಲ್ಲೂಕಿನ ಕೂಡಬೆಟ್ಟು-ಮಾಳ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಗ್ರಾಮೀಣ ಪ್ರದೇಶದ ಮಕ್ಕಳೂ ಸೇರಲಾರಂಭಿಸಿದ್ದು, ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ.

ಮಕ್ಕಳ ಹೆತ್ತವರು ಇಂತಹ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳನ್ನು ಕನ್ನಡ ಶಾಲೆಯಲ್ಲೇ ವಿದ್ಯಾಭ್ಯಾಸ ನೀಡಬೇಕು’ ಎಂದರು. ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಮಾತನಾಡಿ,  ಸುವರ್ಣ ಮಹೋತ್ಸವ ಆಚರಿಸುತ್ತಿರುವ ಶಾಲೆ ಪರಿಸರದ ಮತ್ತಷ್ಟು ಮಂದಿಗೆ ವಿದ್ಯಾಭ್ಯಾಸ ನೀಡುವಂತಾಗಲಿ ಎಂದರು.

ತಾಲ್ಲೂಕಿನ ಮಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾ ಪೂಜಾರ್ತಿ ಧ್ವಜಾರೋಹಣ ಮಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿಲ್ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ನಡೆಯಿತು. ರಮೇಶ್ ಚಿಪಳೂಣ್‌ಕರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸುಗುಣಾ ಸುವರ್ಣ ಇದ್ದರು.

ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ರವಿಶಂಕರ್ ಶೇರಿಗಾರ್ ಸ್ವಾಗತಿಸಿದರು.  ಮುಖ್ಯಶಿಕ್ಷಕಿ ಜೆಸಿಂತಾ ಪಾಯ್ಸ್ ವರದಿ ವಾಚಿಸಿದರು. ದೈಹಿಕ ಶಿಕ್ಷಕ ಜಯಾನಂದ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕ ಅರವಿಂದ ಬಿ.ಜೋಶಿ ವಂದಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ, ಹಳೆವಿದ್ಯಾರ್ಥಿಗಳಿಂದ ತುಳು ನಾಟಕ ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT