ಕುಂದಾಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿದ ಆಶೀರ್ವಾದದಿಂದ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾಯಕಲ್ಪ ನೀಡಿದ್ದು, ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಇಲ್ಲಿಗೆ ಸಮೀಪದ ವಂಡ್ಸೆ ಸಮೀಪದ ನಂದ್ರೊಳ್ಳಿ-ಬೆಳ್ಳಾಲ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಿಯಾದ ₹ 4.35 ಕೋಟಿ ಅನುದಾನದ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಗರಿಷ್ಠ ಅನುದಾನ ತರಲಾಗಿದೆ. ಗ್ರಾಮೀಣ ಭಾಗದ ರಸ್ತೆಯ ಅಭಿವೃದ್ಧಿಗಾಗಿ ಸಿಆರ್ಎಫ್ ಯೋಜನೆ ಅಡಿಯಲ್ಲಿಯೂ ಮಂಜೂರಾತಿ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಹಾಗೂ ಸಂಪರ್ಕ ಸೇತುವೆಗೆ ಕಾಯಕಲ್ಪ ಮಾಡುವ ಮೂಲಕ ಕ್ಷೇತ್ರದ ಜನರಿಗೆ ನೀಡಿರುವ ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಅವರು ಹೇಳಿದರು.
ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ಉದಯ್ಕುಮಾರ ಶೆಟ್ಟಿ, ವಕೀಲ ಪ್ರಸನ್ನಕುಮಾರ ಶೆಟ್ಟಿ ಕೆರಾಡಿ, ಹರ್ಜಿ ಕರುಣಾಕರ ಶೆಟ್ಟಿ, ಸಂಜೀವ ಪೂಜಾರಿ ವಂಡ್ಸೆ ಇದ್ದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ರಾಜೂ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ ಮೊವಾಡಿ, ಲೋಕೋಪಯೋಗಿ ಸಹಾ ಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ, ಎಪಿಎಂಸಿ ಅಧ್ಯಕ್ಷ ಶರತ್ಕುಮಾರ ಶೆಟ್ಟಿ, ಕಟ್ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನೂಸೂಯ ಚಂದ್ರಶೇಖರ ಆಚಾರ್, ಮೀನುಗಾರರ ಸೊಸೈಟಿ ಅಧ್ಯಕ್ಷ ಚಂದ್ರ ನಾಯಕ್, ಪ್ರಮುಖರಾದ ಸೀತಾರಾಮ ಶೆಟ್ಟಿ, ಆನಂದ ಶೆಟ್ಟಿ, ವಿಠ್ಠಲ್ ಶೆಟ್ಟಿ, ರವಿ ಪೂಜಾರಿ, ಕರಿಯಣ್ಣ ಪೂಜಾರಿ, ರೇವತಿ ಡಿ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಇದ್ದರು.
ಶಂಕುಸ್ಥಾಪನೆ
ತಾಲ್ಲೂಕಿನ ಪ್ರಸಿದ್ದ ಕಟ್ಬೇಲ್ತೂರು ಶ್ರೀ ಭದ್ರಮಹಾಂಕಾಳಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ₹ 85 ಲಕ್ಷ ಅನುದಾನದ ಕಾಮಗಾರಿಗೆ ಹಾಗೂ ₹ 3 ಕೋಟಿ ವೆಚ್ಚದ ಮೊವಾಡಿ-ದೇವಳಿ ರಸ್ತೆ ಕಾಮಗಾರಿಗೂ ಶಾಸಕ ಕೆ.ಗೋಪಾಲ ಪೂಜಾರಿ ಶಂಕುಸ್ಥಾಪನೆ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.