ಉಡುಪಿ: ‘ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಮ್ಮದೇ ಎಂದು ತಿಳಿದು, ಅದನ್ನು ಸರಿಯಾದ ರೀತಿಯಲ್ಲಿ ಜವಾಬ್ದಾರಿಯುತವಾಗಿ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಸಾರ್ವಜನಿಕರಿಗೆ ಸ್ವಚ್ಛತೆಯ ಜಾಗೃತಿ ಮೂಡಿಸುವ ಸಲುವಾಗಿ ಉಡುಪಿ ನಗರಸಭೆಯ ಆಶ್ರಯದಲ್ಲಿ ರಂಗಭೂಮಿ ಕಲಾವಿದರು ಪ್ರಸ್ತುತ ಪಡಿಸುವ ‘ಕಸರಕ್ಕಸ’ ಬೀದಿ ನಾಟಕಕ್ಕೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ನಗರಸಭೆ ಮತ್ತು ಸರ್ಕಾರಕ್ಕೆ ತ್ಯಾಜ್ಯ ವಿಲೇವಾರಿ ಮಾಡುವ ಜವಾಬ್ದಾರಿ ಎಷ್ಟಿದೆಯೋ, ಅಷ್ಟೇ ಜವಾಬ್ದಾರಿ ಪ್ರತಿಯೊಂದು ಕುಟುಂಬಕ್ಕೆ ಇದೆ. ಆ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವತ್ತಾ ಜನರು ಗಮನಕೊಡಬೇಕು.
ಸ್ವಚ್ಛತೆಯಲ್ಲಿ ಉಡುಪಿ ನಗರಸಭೆ ಇಡೀ ದೇಶದಲ್ಲಿ 153ನೇ ಸ್ಥಾನದಲ್ಲಿದೆ. ಪ್ರಥಮ ಸ್ಥಾನ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ನಗರಸಭಾ ವ್ಯಾಪ್ತಿಯ ಪ್ರತೀ ಮನೆಯವರು ಸಂಕಲ್ಪ ಮಾಡಬೇಕು’ ಎಂದರು.
ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಪೌರಾಯುಕ್ತ ಡಿ. ಮಂಜುನಾಥಯ್ಯ, ಪರಿಸರ ಎಂಜಿನಿಯರ್ ರಾಘವೇಂದ್ರ, ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ನಗರಸಭೆ ಸ್ವಚ್ಛತಾ ರಾಯಭಾರಿ ಅವಿನಾಶ್ ಕಾಮತ್,ಕಾರ್ಯಕ್ರಮದ ಸಂಚಾಲಕ ಪ್ರದೀಪ್ಚಂದ್ರ ಕುತ್ಪಾಡಿ, ರವಿರಾಜ್ ಎಚ್.ಪಿ. ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.