ADVERTISEMENT

ದೇಶದ ಭದ್ರತೆಗೆ ಬಿಜೆಪಿ ಅಧಿಕಾರಕ್ಕೆ ಬರಲಿ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2014, 5:11 IST
Last Updated 9 ಏಪ್ರಿಲ್ 2014, 5:11 IST
ಚಿಕ್ಕಮಗಳೂರಿನ ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.
ಚಿಕ್ಕಮಗಳೂರಿನ ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.   

ಚಿಕ್ಕಮಗಳೂರು: ದೇಶದ ಭದ್ರತೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿಯಾಗುವುದು ಅತಿ ಮುಖ್ಯ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರನ್ನು ಸಂಸತ್ತಿಗೆ ಕಳುಹಿಸುವ ಮೂಲಕ ಶಕ್ತಿ ತುಂಬಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.­ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿದರು.

ಮುಗುಳುವಳ್ಳಿ ಗ್ರಾಮದಲ್ಲಿ ಸೋಮ­ವಾರ ಸಂಜೆ ಚುನಾವಣೆ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ದೇಶದ ಭದ್ರತೆ­ಗಾಗಿ ಕಾಂಗ್ರೆಸ್, ಜೆಡಿಎಸ್ ಮತ್ತು ವಿವಿಧ ಜಾತಿ ಸಮುದಾಯಗಳೆಲ್ಲ ಒಂದಾಗಿ ಬಿಜೆಪಿ ಗೆಲುವಿಗೆ ಸಹಕರಿ­ಸುವಂತೆ ತಿಳಿಸಿದರು.

ರಾಜ್ಯ ಸರ್ಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಅನುಮಾನ ರಾಜ್ಯದ ಜನತೆ ಕಾಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆಗಳು ಹೆಚ್ಚಾಗಿದ್ದು, ರೈತರು ಬೆಳನಷ್ಟದಿಂದ ಸಂಕಷ್ಟದಲ್ಲಿದ್ದು, ರಸ್ತೆಗಳು ಹಾಳಾಗಿವೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಕಾಂಗ್ರೆಸ್ ಪಕ್ಷ ದೇಶದ ಗಡಿ ರಕ್ಷಣೆ­ಯಲ್ಲಿ ವಿಫಲವಾಗಿದೆ. ಭಯೋತ್ಪಾದ­ಕರು ಮತ್ತು ನಕ್ಸಲರ ಜೊತೆ ಕೇವಲ ಓಟಿಗಾಗಿ ಕೈಜೋಡಿಸಿರುವ ಪಕ್ಷವನ್ನು ಕಿತ್ತೊಗೆಯಬೇಕು. ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳದೆ ದೇಶದ ರಕ್ಷಣೆಗೆ ನರೇಂದ್ರ ಮೋದಿಯವರು ಪ್ರಧಾನಿ­ಯಾಗಲೇಬೇಕೆಂದರು.

ಮಾಜಿ ಶಾಸಕ ಎಂ.ಪಿ.­ಕುಮಾರಸ್ವಾಮಿ, ಜಿ.ಪಂ. ಸದಸ್ಯರಾದ ನಿರಂಜನ್, ಕಲ್ಮುರಡಪ್ಪ, ರೇಖಾ ಹುಲಿಯಪ್ಪಗೌಡ, ಮುಖಂಡರಾದ ಎಚ್.ಡಿ.ತಮ್ಮಯ್ಯ, ಮಂಜುನಾಥ್, ಅಂಬಳೆ ಶಕ್ತಿ ಕೇಂದ್ರದ ಅಧ್ಯಕ್ಷ ರವಿ, ದೀಪಕ್ ದೊಡ್ಡಯ್ಯ, ದಿನೇಶ್, ಎಂ.ಡಿ.ರವಿ ಹಾಗೂ ಪಕ್ಷದ ಇತರೆ ಕಾರ್ಯಕರ್ತರು ಉಪಸ್ಥಿತರಿದ್ದರು. ಕೆಜೆಪಿ ಮುಖಂಡ­ರಾದ ಸುವರ್ಣ ಕೇಶವಮೂರ್ತಿ, ಭಾನು­ಮತಿ ಸರಸ್ವತಿ, ಧನಲಕ್ಷ್ಮಿ, ಸರಸ್ವತಿ, ಉಷಾ, ಭಾಗ್ಯಮ್ಮ ಬಿಜೆಪಿ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.