ಕುಂದಾಪುರ: ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಎನ್ನುವುದು ನಿಂತ ನೀರಿನಂತಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಜನ ಸಾಮಾನ್ಯರ ನೋವುಗಳಿಗೆ ಸ್ಪಂದನೆ ದೊರಕುತ್ತಿಲ್ಲ. ಕ್ಷೇತ್ರದ ಸಾಮಾನ್ಯ ಜನರ ಧ್ವನಿ ವಿಧಾನಸಭೆಯಲ್ಲಿ ಕೇಳುವಂತಾಗಬೇಕು ಎಂದು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು.
ಇಲ್ಲಿಗೆ ಸಮೀಪದ ಮಂದರ್ತಿ ಮೈರ್ಕೊಮೆಯಲ್ಲಿ ಸೋಮವಾರ ರಾತ್ರಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ. ಪಕ್ಷ ನನಗೆ ಅವಕಾಶ ನೀಡಿದಲ್ಲಿ ಹಾಗೂ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವಕರ, ಆಶಕ್ತರ, ಬಡವರ, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಧ್ವನಿಯಾಗಿರಲು ಪ್ರಯತ್ನಿಸುತ್ತೇನೆ. ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಮರಸ್ಯ ತರುವುದರ ಜತೆಗೆ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುತ್ತೇನೆ’ ಎಂದು ಭರವಸೆ ವ್ಯಕ್ತಪಡಿಸಿದರು.
ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಂಕರ ಕುಂದರ್, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಆಧ್ಯಕ್ಷೆ ಮಮತಾ ಕಿಶೋರ್ ಶೆಟ್ಟಿ, ಕೋಟ ಸಿ.ಎ.ಬ್ಯಾಂಕಿನ ಅಧ್ಯಕ್ಷ ತಿಮ್ಮ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕಿಶೋರ್ ಶೆಟ್ಟಿ, ರಮಾನಂದ ಶೆಟ್ಟಿ ಬಾರ್ಕೂರು, ಗ್ರಾಮ ಪಂಚಾಯಿತಿ ಸದಸ್ಯೆ ಪ್ರೀತಿ, ರಘುರಾಮನ ಶೆಟ್ಟಿ ಹಾಗೂ ನರಸಿಂಹ ನಾಯಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.