ಉಡುಪಿ: `ಕೌಶಲ್ಯವೇ ಮುಖ್ಯ ಆಗಿರುವ ಪರಂಪರಾಗತ ವೃತ್ತಿಗಳನ್ನು ಮುಂದುವರೆಸುವ ಮೂಲಕ ಅವುಗಳನ್ನು ಮುಂದಿನ ಜನಾಂಗಕ್ಕೆ ತಲುಪಿಸಬೇಕು'ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಕರೆ ನೀಡಿದರು.
ಕೈಗಾರಿಕಾ ಇಲಾಖೆ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಸೋಮ ವಾರ ಏರ್ಪಡಿಸಿದ್ದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ವಿತರಣಾ ಸಮಾ ರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಂಪರಾಗತ ವೃತ್ತಿಗಳನ್ನು ಮುಂದುವರೆಸಲು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಉಡುಪಿ ತಾಲ್ಲೂಕಿನ 142 ಮಂದಿ ಗ್ರಾಮೀಣ ಕುಶಲ ಕರ್ಮಿಗಳಿಗೆ ರೂ.3ಸಾವಿರ ವೆಚ್ಚದಲ್ಲಿ ವೃತ್ತಿಗಳಿಗೆ ಸಂಬಂಧಿಸಿದ 3.5 ಲಕ್ಷ ಮೌಲ್ಯದ ಉಪಕರಣಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಮಮತಾ ಆರ್. ಶೆಟ್ಟಿ, ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು, ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಗೋಪಿ ಕೆ ನಾಯ್ಕ, ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಐಡಾ ಗಿಬ್ಬ ಡಿಸೋಜ, ಗೀತಾಂಜಲಿ ಸುವರ್ಣ, ರಶ್ವತ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಗ್ರಾಮಾಂತರ ಕೈಗಾರಿಕಾ ಇಲಾಖೆಯ ಉಪ ನಿರ್ದೆಶಕ ರಮೇಶ್ ಕುಮಾರ್ ಸ್ವಾಗತಿಸಿದರು. ಕೈಗಾರಿಕಾ ವಿಸ್ತರಣಾಧಿಕಾರಿ ಸೀತಾರಾಮ ಶೆಟ್ಟಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.