ADVERTISEMENT

ವೇಣೂರು: ಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 9:40 IST
Last Updated 10 ಅಕ್ಟೋಬರ್ 2011, 9:40 IST

ಬೆಳ್ತಂಗಡಿ: ಪ್ರತಿ ವ್ಯಕ್ತಿಯಲ್ಲಿಯೂ ಶಕ್ತಿ - ಸಾಮರ್ಥ್ಯ, ಪ್ರತಿಭೆ, ಕೌಶಲ ಇದೆ. ಸಮಿತಿಯ ಸರ್ವ ಸದಸ್ಯರ ಸಕ್ರಿಯ ಸಹಕಾರ, ಬದ್ಧತೆಯಿಂದ ಕಾರ್ಯ ನಿರ್ವಹಿಸಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಗೊಳಿಸಬೇಕು ಎಂದು ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಹೇಳಿದರು.

ವೇಣೂರಿನ ತ್ಯಾಗಿ ಭವನದಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಾಲಯವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಿತಿಯವರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಯುವಜನತೆಗೂ ಉತ್ತಮ ಸಂಸ್ಕಾರ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಭಾರತೀಯ ಜೈನ್‌ಮಿಲನ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಮಾತನಾಡಿ, ಸಂಪ್ರದಾಯದಂತೆ ರಾತ್ರಿ ಮಹಾಮಸ್ತಕಾಭಿಷೇಕ ನಡೆಯಲಿದ್ದು ಹುಬ್ಬಳ್ಳಿಯ ವರೂರು ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ 180 ಜೈನ್ ಮಿಲನ್ ಶಾಖೆಗಳಿದ್ದು ಎಲ್ಲ ಶಾಖೆಗಳ ಸದಸ್ಯರನ್ನು ಮಹೋತ್ಸವದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿದ್ದರು.

ಸ್ವಾಗತ ಸಮಿತಿ ಉಪಾಧ್ಯಕ್ಷರಾದ ಪ್ರೊ. ಎನ್.ಜೆ ಕಡಂಬ, ಡಾ. ಬಿ.ಪಿ ಇಂದ್ರ, ಸಂಪತ್ ಸಾಮ್ರಾಜ್ಯ ಶಿರ್ತಾಡಿ ಇದ್ದರು.ವಿವಿಧ ಸಮಿತಿ ಸಂಚಾಲಕರೊಂದಿಗೆ ಪೂರ್ವ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇದೇ 16ರಂದು ಮುಂದಿನ ಸಮಾಲೋಚನಾ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಜತೆ ಶೀಘ್ರದಲ್ಲೇ ಸಮಾಲೋಚನಾ ಸಭೆ ನಡೆಸಲು ನಿರ್ಧರಿಸಲಾಯಿತು.

ಮಹಾ ಮಸ್ತಕಾಭಿಷೇಕ: 2012 ರ ಜನವರಿ 28 ರಿಂದ ಫೆ. 5ರ ವರೆಗೆ ವೇಣೂರಿನಲ್ಲಿರುವ  35 ಅಡಿ ಎತ್ತರದ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು ಭರದಿಂದ ಸಿದ್ಧತೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.