ADVERTISEMENT

ಶಿಕ್ಷಣ ಅಭಿವೃದ್ಧಿಯಲ್ಲಿ ಪಕ್ಷಭೇದ ಸಲ್ಲ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2011, 8:15 IST
Last Updated 30 ಮಾರ್ಚ್ 2011, 8:15 IST
ಶಿಕ್ಷಣ ಅಭಿವೃದ್ಧಿಯಲ್ಲಿ ಪಕ್ಷಭೇದ ಸಲ್ಲ
ಶಿಕ್ಷಣ ಅಭಿವೃದ್ಧಿಯಲ್ಲಿ ಪಕ್ಷಭೇದ ಸಲ್ಲ   

ಬ್ರಹ್ಮಾವರ: ‘ಜವಾಬ್ದಾರಿಯುತ ಕೆಲಸವಾದ ಶಿಕ್ಷಕ ವೃತ್ತಿಯಿಂದ ಶಿಕ್ಷಣ ಕ್ಷೇತ್ರ ತನ್ನ ಪಾವಿತ್ರ್ಯತೆ ಉಳಿಸಿಕೊಂಡಿದೆ. ಜನಪ್ರತಿನಿಧಿಗಳು ಪಕ್ಷಭೇದ ಮರೆತು ಶಿಕ್ಷಣದ ಅಭಿವೃದ್ಧಿಗೆ ಕಾಳಜಿ ವಹಿಸಬೇಕು’  ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ಶೆಟ್ಟಿ ಹೇಳಿದರು. ಬ್ರಹ್ಮಾವರದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಸರ್ವಶಿಕ್ಷಣ ಅಭಿಯಾನದಡಿ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಉಡುಪಿ, ಬ್ರಹ್ಮಾವರದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಜಂಟಿ ಆಶ್ರಯದಲ್ಲಿ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಶ್ರವಣ ಸಾಧನ, ಗಾಲಿ ಕುರ್ಚಿ, ಎಂ.ಆರ್.ಕಿಟ್, ಮುಂತಾದ ಅನೇಕ ಸಲಕರಣೆಗಳನ್ನು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕ್ರೀಡಾ ವಿಭಾಗದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ನಗದು ಬಹುಮಾನ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಶಾನುಭಾಗ್, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ನಾರಾಯಣ, ಜಿಲ್ಲಾ ಪಂಚಾಯಿತಿ ಸುನೀತಾ ರಾಜಾರಾಂ, ಸರ್ಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲೆ ತಾರಾದೇವಿ, ಬ್ರಹ್ಮಾವರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ಬೈಂದೂರು ವಲಯಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಶ್ವಾಸ್, ಬಿ.ಆರ್.ಸಿ ಆರೂರು ತಿಮ್ಮಪ್ಪ ಶೆಟ್ಟಿ, ಶಿವಾನಂದ, ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.