ADVERTISEMENT

ಸಂವಿಧಾನ ನೀಡಿದ ಸೌಲಭ್ಯ ಕಸಿಯುವ ಹುನ್ನಾರ

ದಲಿತ ದೌರ್ಜನ್ಯ ತಡೆ ಕಾಯ್ದೆ ತೀರ್ಪಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 11:34 IST
Last Updated 7 ಏಪ್ರಿಲ್ 2018, 11:34 IST
ಸುಪ್ರೀಂ ಕೋರ್ಟ್‌ ದಲಿತ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದರು.     ಪ್ರಜಾವಾಣಿ ಚಿತ್ರ
ಸುಪ್ರೀಂ ಕೋರ್ಟ್‌ ದಲಿತ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ   

ಉಡುಪಿ: ದಲಿತ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಹಾಗೂ ಅದನ್ನು ಹಿಂಪಡೆಯುವಂತೆ ಆಗ್ರಹಿಸಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ನಗರದಲ್ಲಿ ಶುಕ್ರವಾರ ವ್ಯಾಪಕ ಪ್ರತಿಭಟನೆ ನಡೆಸಿದರು.

ದೇಶದ ದಲಿತರಿಗೆ ಸಂವಿಧಾನ ಒದಗಿಸಿರುವ ಸಾಮಾಜಿಕ ಸಮಾನತೆ ಅವಕಾಶವನ್ನು ನಿರಾಕರಿಸಲು ಷಡ್ಯಂತ್ರ ರೂಪಿಸಲಾಗುತ್ತಿದೆ. ಮೊದಲು ಬಡ್ತಿ ಮೀಸಲಾತಿ ಕಸಿದುಕೊಳ್ಳಲಾಯಿತು. ಈಗ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ದಲಿತರ ಹಿತಕ್ಕೆ ವಿರುದ್ಧವಾಗಿದೆ. ದಲಿತ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳ್ಳುವಂತಹ ತೀರ್ಪು ಇದಾಗಿದೆ. ಇದನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಿದವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಗುಜರಾತ್‌ನಲ್ಲಿ ಕುದುರೆ ಸವಾರಿ ಮಾಡಿದ ದಲಿತ ಯುವಕನ ಹೊಡೆದು ಸಾಯಿಸಲಾಯಿತು. ಮಧ್ಯಪ್ರದೇಶ, ರಾಜಸ್ತಾನ , ಉತ್ತರ ಪ್ರದೇಶಗಳಲ್ಲಿ ದಲಿತರ ಮೇಲೆ ದಿನ ನಿತ್ಯ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗುತ್ತಿದೆ. ಆದರೂ, ಅದರ ನಿಯಂತ್ರಣದ ಬಗ್ಗೆ ಯಾವುದೇ ರೀತಿ ಕ್ರಮವನ್ನು ಅಲ್ಲಿನ ಸರ್ಕಾರಗಳು ಕೈಗೊಳ್ಳುತ್ತಿಲ್ಲ. ಒಟ್ಟಾರೆ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ದಲಿತ ಅಸ್ಮಿತೆ ಕೊನೆಗಾಣಿಸಲು ಪ್ರತಿಗಾಮಿ ಶಕ್ತಿಗಳು ಮುಂದಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ವಿಜಯ ಮಲ್ಯ ₹11,000 ಕೋಟಿ, ನೀರವ್ ಮೋದಿ 13,000 ಕೋಟಿ, ಮೆಹುಲ್ ಬಾಯ್ 11,000 ಕೋಟಿ, ಜತಿನ್ ಮೆಹ್ತಾ 6,012 ಕೋಟಿ ವಂಚನೆ ಮಾಡಿ ದೇಶ ಬಿಟ್ಟು ಹೋಗಿದ್ದಾರೆ. ಆದರೆ, ನ್ಯಾಯಾಲಯ ಏನೂ ಕ್ರಮ ಕೈಗೊಡಿಲ್ಲ. ದಲಿತರ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ದಲಿತ ಹಿತಾಸಕ್ತಿಗೆ ವಿರುದ್ಧವಾಗಿದೆ. ದಲಿತರಿಗೆ ಬೇಕಾದ ಸಮಾನತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿ ಪರ ಚಿಂತಕ ವಿಲಿಯಂ ಪಾರ್ಟಿಸ್ ಹೇಳಿದರು.

ಮೀಸಲಾತಿ ಹಿಂಪಡೆಯುವ ಹುನ್ನಾರ ನಡೆಯುತ್ತಿದೆ. ಬಡ್ತಿ ಮೀಸಲಾತಿ ಹಿಂದಕ್ಕೆ ಪಡೆಯಲಾಗಿದೆ. ಹಂತ ಹಂತವಾಗಿ ದಲಿತರನ್ನು ಈ ದೇಶದ ಮುಂಚೂಣಿಗೆ ಬರದಂತೆ ತಡೆಯುವ ಕೆಲಸ ಆಗ್ತಾ ಇದೆ. ಮುಂದಿನ ದಿನಗಳಲ್ಲಿ ಎಲ್ಲರೂ ಜಾಗೃತರಾಗಿ ಕೇಂದ್ರದ ಮನುವಾದಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸುಂದರ್ ಮಾಸ್ತರ್ ಹೇಳಿದರು.

ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶ್ಯಾಮರಾಜ್ ಬಿರ್ತಿ, ಕೋಮು ಸೌಹಾರ್ದ ವೇದಿಕೆಯ ಆಧ್ಯಕ್ಷ ರಾಜಶೇಖರ್, ಕೆ. ಫಣಿರಾಜ್ ಇದ್ದರು.

**

ದಲಿತರು ಈ ದೇಶದ ಮುಂಚೂಣಿಗೆ ಬರದಂತೆ ತಡೆಯುವ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ – ಸುಂದರ್ ಮಾಸ್ತರ್, ದಲಿತ ಮುಖಂಡ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.