ಉಡುಪಿ: ‘ಸೂಕ್ತ ಕಾಲದಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆದರೆ ಕ್ಷಯ ರೋಗ ಗುಣವಾಗುತ್ತದೆ. ಹೊಸ ರೋಗಿಗಳು ಆರು ತಿಂಗಳು ಮತ್ತು ಹಳೆಯ ರೋಗಿಗಳು ಎಂಟು ತಿಂಗಳು ಚಿಕಿತ್ಸೆ ಪಡೆದುಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಂ. ಕನಗವಲ್ಲಿ ಹೇಳಿದರು.
ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಮತ್ತು ಸಿಎಸ್ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ‘ವಿಶ್ವ ಕ್ಷಯರೋಗ’ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ವಿಶ್ವನಾಥ್ ಮಾತನಾಡಿ, ದೇಶದಲ್ಲಿ ಪ್ರತಿ ದಿನ ಒಂದು ಸಾವಿರ ಮಂದಿ ಕ್ಷಯದಿಂದ ಸಾಯುತ್ತಿದ್ದಾರೆ. ಪ್ರತಿ ದಿನ 40 ಸಾವಿರ ಜನರಿಗೆ ಸೋಂಕು ತಗುಲುತ್ತಿದ್ದು, ಐದು ಸಾವಿರ ಮಂದಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 1 ಸಾವಿರ ಕ್ಷಯ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಶೇ80ರಷ್ಟು ಮಂದಿ ಸಂಪೂರ್ಣ ಚಿಕಿತ್ಸೆ ಪಡೆದುಕೊಂಡರೆ, ಉಳಿದವರು ಚಿಕಿತ್ಸೆ ನಿಲ್ಲಿಸುತ್ತಿದ್ದಾರೆ ಅಥವಾ ಬೇರೆಡೆಗೆ ಹೋಗುತ್ತಿದ್ದಾರೆ ಎಂದರು.
ಜಗತ್ತಿನಲ್ಲಿ ಪ್ರತಿ ವರ್ಷ 90 ಲಕ್ಷ ಜನರು ಕ್ಷಯರೋಗ ಪೀಡಿತರಾಗುತ್ತಿದ್ದಾರೆ. ಭಾರತದಲ್ಲಿ ಈ ಸಂಖ್ಯೆ 18 ಲಕ್ಷ ಇದೆ ಎಂದು ಮಾಹಿತಿ ನೀಡಿದರು.
ಸಿಎಸ್ಐ ಲೋಂಬಾರ್ಡ್ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ರತೇಶ್ ಜೋನ್ಸನ್ ಅಧ್ಯಕ್ಷತೆ ವಹಿಸಿದ್ದರು.
ಉಡುಪಿಯ ಡಯಾಗ್ನಸ್ಟಿಕ್ ಕ್ಲಿನಿಕ್ನ ಫಿಸಿಶಿಯನ್ ಡಾ. ಎನ್.ಆರ್. ಭಟ್, ಮಣಿಪಾಲದ ಸೋನಿಯಾ ಕ್ಲಿನಿಕ್ ಮತ್ತು ನರ್ಸಿಂಗ್ ಹೋಂನ ಡಾ. ಎ. ಗಿರಿಜಾ ಉಪಸ್ಥಿತರಿದ್ದರು.
ಪೂರ್ಣಿಮಾ ಮತ್ತು ಆಶಾ ಪ್ರಾರ್ಥನೆ ಮಾಡಿದರು. ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.