ADVERTISEMENT

‘ದೇಶದ ಭದ್ರತೆಗೆ ನರೇಂದ್ರ ಮೋದಿ ಪ್ರಧಾನಿ ಆಗಲಿ’

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2014, 9:36 IST
Last Updated 8 ಏಪ್ರಿಲ್ 2014, 9:36 IST
ತರೀಕೆರೆ ಸಮೀಪದ ಬೇಲೇನಹಳ್ಳಿ ಗ್ರಾಮದಲ್ಲಿ ಸೋಮವಾರ  ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನು ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ತರೀಕೆರೆ ಸಮೀಪದ ಬೇಲೇನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನು ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.   

ತರೀಕೆರೆ: ದೇಶದ ಭದ್ರತೆ ಮತ್ತು ಅಭಿವೃದ್ಧಿಗಾಗಿ ನರೇಂದ್ರ ಮೋದಿ ಈ ಪ್ರಧಾನಿ ಆಗುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯನ್ನು ಸಂಸತ್ತಿಗೆ ಕಳುಹಿಸುವ ಮೂಲಕ ಶಕ್ತಿ ತುಂಬುವಂತೆ ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಕರೆ ನೀಡಿದರು.

ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ, ಲಿಂಗದಹಳ್ಳಿ, ದೊಡ್ಡಬೋಕಿಕೆರೆ, ಅಜ್ಜಂಪುರ, ಶಿವನಿ ಭಾಗಗಳ ಹಲವು ಗ್ರಾಮಗಳಿಗೆ ಸೋಮವಾರ ತೆರಳಿ ಚುನಾವಣಾ ಪ್ರಚಾರ ಸಭೆಯಲ್ಲಿ  ಮಾತನಾಡಿದರು.

ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎಂಬ ಅಭಿಪ್ರಾಯ ಜನರ ಲ್ಲಿದೆ. ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಕೈಗೊಳ್ಳದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶ ದಲ್ಲಿ ವಿದ್ಯುತ್ ಸಮಸ್ಯೆ ಮತ್ತು ಕುಡಿ ಯುವ ನೀರಿಗೂ ಸಮಸ್ಯೆ ಉಂಟಾಗಿದೆ. ನಗರ ಪ್ರದೇಶಗಳಿಗೆ ವಿದ್ಯುತ್ ಪೂರೈಸಲು ಸರ್ಕಾರದಿಂದ ಸಾಧ್ಯವಾ ಗುತ್ತಿಲ್ಲ. ರೈತರು ವಿದ್ಯುತ್ ಸಮಸ್ಯೆಯಿಂ ದಾಗಿ ಬೆಳೆ ನಾಶದ ಪರಿಸ್ಥಿತಿ ಅನುಭವಿ ಸುತ್ತಿದ್ದಾರೆ. ರಸ್ತೆಗಳು ಹಾಳಾಗಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರ ರಿಪೇರಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಲೇವಡಿ ಮಾಡಿದರು.

ದೇಶದ ಭದ್ರತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಕುಸಿ ದಿದ್ದು, ಕ್ಷೇತ್ರದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ, ಕಾಫಿ ಬೆಳೆಗಾರರ ಸಮಸ್ಯೆ, ಭೂಮಿ ಒತ್ತುವರಿ , ನಕ್ಸಲ್ ಸಮಸ್ಯೆ, ನಿರುದ್ಯೋಗ ಸಮಸ್ಯೆಗಳು ಎದ್ದು ಕಾಣುತ್ತಿದ್ದು ಇದಕ್ಕೆ ಪರಿಹಾರ ಬಿಜೆಪಿ ಒಂದೇ ಎಂದರು.

ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಮಾತನಾಡಿ, ಕಾಂಗ್ರೆಸ್ ತನ್ನ 50 ವರ್ಷದ ಆಡಳಿತದಲ್ಲಿ ಕೇವಲ 8 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಪಡಿಸಿದರೆ, ವಾಜ ಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಕೆಲವೇ ವರ್ಷಗಳಲ್ಲಿ 28 ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ಗ್ರಾಮ ರಸ್ತೆಗಳನ್ನು ಮುಖ್ಯ ರಸ್ತೆಗೆ ಜೋಡಿಸುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಜಾರಿಗೆ ತಂದಿತು ಎಂದು ತಿಳಿಸಿದರು.

ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ, ನರೇಂದ್ರ ಮೋದಿ ಈ ದೇಶದ ಪ್ರಧಾನಿ ಆಗಬೇಕೆಂಬುದು ಈ ದೇಶದ ಜನರ ಬಯಕೆ ಆಗಿದ್ದು ಅದನ್ನು ಯಾರಿಂದಲೂ ತಪ್ಪಿಸಲಾಗದು ಎಂದು ತಿಳಿಸಿದರು.

ಸಭೆಯಲ್ಲಿ ಉಡುಪಿ–ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ಟಿ.ಎಚ್. ಶಿವಶಂಕರಪ್ಪ, ಡಿ.ಎಸ್. ಸುರೇಶ್ ಇನ್ನಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.