ಉಡುಪಿ: ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಪಡೆದಿರುವ ₹ 258 ಕೋಟಿ ಬೆಳೆಸಾಲ ಮನ್ನಾ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರು ಹೆಸರುಗಳನ್ನು ನೊಂದಾಯಿಸಲು ಜನವರಿ 10ರವರೆಗೆ ಕಾಲಾವಕಾಶ ಇದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 2009ರ ಏಪ್ರಿಲ್ 1ರ ನಂತರ ಮಂಜೂರಾದ ಬೆಳೆ ಸಾಲಗಳು ಹಾಗೂ 2017ರ ಡಿಸೆಂಬರ್ ಅಂತ್ಯದವರೆಗೂ ಬಾಕಿ ಇರುವ ಸಾಲ ಮನ್ನಾ ಆಗಲಿದೆ. ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದ ₹ 1 ಲಕ್ಷ ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಪಡೆದ ₹ 2 ಲಕ್ಷದವರೆಗಿನ ಸಾಲಗಳು ಮನ್ನಾ ಯೋಜನೆಗೆ ಒಳಪಡಲಿವೆ.ಈಗಾಗಲೇ ಸಾಲ ಮರುಪಾವತಿ ಮಾಡಿರುವ ರೈತರಿಗೆ ಅವರ ಉಳಿತಾಯ ಖಾತೆಗಳಿಗೆ ಯೋಜನೆಯ ಹಣ ಜಮೆ ಆಗಲಿದೆ ಎಂದು ಎಡಿಸಿ ತಿಳಿಸಿದರು.
ಜಿಲ್ಲೆಯಲ್ಲಿ 24232 ರೈತರು ಸಹಕಾರಿ ಕೃಷಿಪತ್ತಿನ ಸಹಕಾರ ಸಂಘ ಮತ್ತು ಡಿಸಿಸಿ ಬ್ಯಾಂಕ್ಗಳಲ್ಲಿ ಸಾಲ ಪಡೆದಿದ್ದು, 4648 ರೈತರು ವಾಣಿಜ್ಯ ಬ್ಯಾಂಕ್ಗಳಲ್ಲಿ ಸಾಲ ಪಡೆದಿದ್ದಾರೆ. ಒಟ್ಟು 258 ಕೋಟಿ ಸಾಲ ಮನ್ನಾ ಯೋಜನೆಯ ವ್ಯಾಪ್ತಿಗೆ ಬರಲಿದೆ. ಸಹಕಾರಿ ಬ್ಯಾಂಕ್ಗಳಲ್ಲಿ ಈಗಾಗಲೇ ಬೆಳೆ ಸಾಲ ಮನ್ನಾ ಯೋಜನೆಗೆ ಬಹುತೇಕ ರೈತರ ನೋದಣಿ ಮುಗಿದಿದ್ದು, ವಾಣಿಜ್ಯ ಬ್ಯಾಂಕ್ಗಳಲ್ಲಿ ನೋಂದಣಿ ನಡೆಯಲಿದೆ ಎಂದರು.
ಸಾಲ ಮನ್ನಾ ಯೋಜನೆಯಡಿ ಹೆಸರು ನೋಂದಾಯಿಸಲು ಸಾಕಷ್ಟು ಕಾಲಾವಕಾಶವಿದ್ದು, ಪ್ರತಿ ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ನ ನಕಲು ಪ್ರತಿ ಹಾಗೂ ಸಾಲಪಡೆದ ಸರ್ವೆ ನಂಬರ್ನ ಮಾಹಿತಿಯನ್ನು ಸ್ವಯಂ ದೃಢೀಕರಿಸಿ, ಸಾಲ ಪಡೆದ ಬ್ಯಾಂಕ್ಗಳಿಗೆ ಸಲ್ಲಿಸಬೇಕು, ಸಹಕಾರಿ ಬ್ಯಾಂಕ್ಗಳಲ್ಲಿ ಬೆಳೆಸಾಲ ಮನ್ನಾ ಪಡೆದ ಫಲಾನುಭವಿಗಳು ವಾಣಿಜ್ಯ ಬ್ಯಾಂಕ್ ಬೆಳೆ ಸಾಲ ಮನ್ನಾ ಯೋಜನೆಯಡಿ ಪಡೆಯಲು ಅರ್ಹರಿರುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರುದ್ರೇಶ್, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.