ಕಾಪು (ಪಡುಬಿದ್ರಿ): ‘ಸಮಾಜವನ್ನು ಒಡೆಯುತ್ತಿರುವ ಮತಾಂಧತೆ, ಕೋಮುವಾದ, ಭಯೋತ್ಪಾದನೆ, ಅಸಮಾನತೆ, ಬಡತನದ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ಇಂದಿನ ದಿನಗಳಲ್ಲಿ ಇದೆ. ಅಮೃತ ಮಹೋತ್ಸವ ವರ್ಷಾಚರಣೆಯ ಮೂಲಕ ನವಭಾರತದ ಸಂಕಲ್ಪವನ್ನು ಸ್ವೀಕರಿಸಬೇಕಾಗಿದೆ’ ಎಂದು ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅಭಿಪ್ರಾಯಪಟ್ಟರು.
ಕಾಪು ತಾಲ್ಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಾಪು ಸರ್ಕಾರಿ ಪ್ರಥಮದರ್ಜೆ ಕಾಲೇಜು ಮೈದಾನದಲ್ಲಿ ಸೋಮವಾರ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ‘ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯನ್ನು ದೇಶದಾದ್ಯಂತ ಹಬ್ಬದ ಮಾದರಿಯಲ್ಲಿ ಆಚರಿಸಲಾಗುತ್ತಿದ್ದು, ಎಲ್ಲರ ಸಹಕಾರದೊಂದಿಗೆ ಇದು ಸಾಧ್ಯವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕಾಪು ಕ್ಷೇತ್ರದಲ್ಲೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ’ ಎಂದರು.
ಸನ್ಮಾನ: ಸಾಧಕರಾದ ನಾಟಿ ವೈದ್ಯೆ ಶಾಲಿನಿ, ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ, ನಿವೃತ್ತ ಹಿರಿಯ ಸೈನಿಕ ಜೆರೋಮ್ ಕೊಮೋಡೋರ್ ಕೆಸ್ತಲಿನೋ ಮತ್ತು ಜಾನಪದ ಕಲಾವಿದ ಗುರುಚರಣ್ ಪೊಲಿಪು ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯ ಸಾಧಕರನ್ನು ಗೌರವಿಸಲಾಯಿತು. ಫಲಾನುಭವಿಗಳಿಗೆ ಹಕ್ಕುಪತ್ರ ಸಹಿತ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ಕಾಪು ಸರ್ಕಲ್ ಇನ್ಸ್ಪೆಕ್ಟರ್ ಕೆ. ಸಿ. ಪೂವಯ್ಯ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಅನಿಲ್ ಕುಮಾರ್, ಕಾಪು ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಮುರಗೋಡ, ಶಿರ್ವ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಸಿ., ಪಡುಬಿದ್ರಿ ಸಬ್ ಇನ್ಸ್ಪೆಕ್ಟರ್ ಪುರುಷೋತ್ತಮ್, ಕಾಪು ಪುರಸಭಾ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.