ADVERTISEMENT

ಜನರ ದಾರಿ ತಪ್ಪಿಸುತ್ತಿರುವ ಮಧ್ವರಾಜ್‌

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 6:20 IST
Last Updated 7 ಜನವರಿ 2018, 6:20 IST

ಉಡುಪಿ: ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾಮಗಾರಿಗೆ ಸಹ ಮುಖ್ಯಮಂತ್ರಿ ಅವರ ಮೂಲಕ ನಿಯಮ ಬಾಹಿರವಾಗಿ ಶಿಲಾನ್ಯಾಸ ಮಾಡಿಸಲು ಹೊರಟಿರುವ ಸಚಿವ ಪ್ರಮೋದ್ ಮಧ್ವರಾಜ್ ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾರ್ಯಸಾಧುವಲ್ಲದ ವಾರಾಹಿ ಯೋಜನೆಯಿಂದ ನೀರು ತರುವುದಾಗಿ ಹೇಳಿ ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಅವರು ಇದೇ 8ರಂದು ಉಡುಪಿ ವಿಧಾನಸಭಾ ಕ್ಷೇತ್ರದ ಸುಮಾರು ₹581 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಮೋದ್ ಹೇಳಿದ್ದಾರೆ. ಆದರೆ, ಅದರಲ್ಲಿರುವ ಪ್ರಮುಖ ₹270 ಕೋಟಿ ಮೊತ್ತದ ವಾರಾಹಿ ಕುಡಿಯುವ ನೀರಿನ ಯೋಜನೆ ಟೆಂಡರ್ ಪ್ರಕ್ರಿಯೆಯೇ ಇನ್ನೂ ಮುಗಿದಿಲ್ಲ. ಇಂತಹ ಕಾಮಗಾರಿಗೆ ಶಿಲಾನ್ಯಾಸ ಮಾಡುವುದು ನಿಯಮಬಾಹಿರ ಎಂದರು.

ವಾರಾಹಿಯಿಂದ ಉಡುಪಿಯ ವರೆಗೆ ಈಗಾಗಲೇ ಇರುವ ರಸ್ತೆ ಮಾರ್ಗದಲ್ಲಿಯೇ, ಅಂದರೆ ರಸ್ತೆ ಅಗೆದು ಅದರ ಕೆಳಗೆ ಪೈಪ್‌ ಅಳವಡಿಸಿ ಆ ಮೂಲಕ ನೀರು ತರಲಾಗುತ್ತದೆ ಎಂಬ ಉಲ್ಲೇಖ ವಾರಾಹಿಯ ವಿಸ್ಕೃತ ಯೋಜನಾ ವರದಿಯಲ್ಲಿದೆ. ರಸ್ತೆ ಮಾರ್ಗ ನೇರವಾಗಿ ಇರುವುದಿಲ್ಲ. ಅಲ್ಲದೆ ಆಮಾರ್ಗದ ಎಲ್ಲ ಪಂಚಾಯಿತಿಗಳಿಂದ ಒಪ್ಪಿಗೆ ಪಡೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಈ ಯೋಜನೆ ಜಾರಿಗೊಳ್ಳಲು ಸಾಧ್ಯವೇ ಇಲ್ಲ. ಇದು ಗೊತ್ತಿದ್ದರೂ ಸಹ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಪ್ರಮೋದ್ ಮಾಡುತ್ತಿದ್ದಾರೆ ಎಂದರು.

ADVERTISEMENT

ಡಿಸಿ ಕೈಗೊಂಬೆ: ಮುಖ್ಯಮಂತ್ರಿ ಅವರ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಪ್ರತಿ ಪಂಚಾಯಿತಿಯಿಂದ 2 ಬಸ್ ಮೂಲಕ ಜನರನ್ನು ಕರೆತರಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಕಾಲೇಜು ವಿದ್ಯಾರ್ಥಿನಿಯರು ಸಮವಸ್ತ್ರ ಇಲ್ಲದೆ ಬರಬೇಕು ಎಂದು ಸಹ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಜನರನ್ನು ಸೇರಿಸುವ ಸಲುವಾಗಿ ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರೂ ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೂ ಮನವಿ ಮಾಡಲಾಗಿದೆ ಎಂದರು. ಮುಖಂಡರಾದ ಯಶ್‌ಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶ್ರೀಶ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.