ADVERTISEMENT

ಜಿಲ್ಲೆಯಲ್ಲಿ 6 ಕೆ.ಪಿ.ಎಸ್‌ ಶಾಲೆ ನಿರ್ಮಾಣಕ್ಕೆ ಅನುಮತಿ ದೊರಕಿದೆ: ಪ್ರಮೋದ್ ಮಧ್ವರಾಜ್‌

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 7:21 IST
Last Updated 27 ಜನವರಿ 2018, 7:21 IST
ಜಿಲ್ಲಾಡಳಿತದ ಉಡುಪಿಯ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಥ ಸಂಚಲನ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.
ಜಿಲ್ಲಾಡಳಿತದ ಉಡುಪಿಯ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಥ ಸಂಚಲನ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.   

ಉಡುಪಿ: ಜಿಲ್ಲೆಯಲ್ಲಿ 6 ಕರ್ನಾಟಕ ಪಬ್ಲಿಕ್ ಸ್ಕೂಲ್‌ ಸ್ಥಾಪನೆಗೆ ಮಂಜೂರಾತಿ ದೊರಕಿದೆ ಎಂದು ಮೀನುಗಾರಿಕೆ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್‌ ತಿಳಿಸಿದರು.

ಜಿಲ್ಲಾಡಳಿತದ ನಗರದ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೂರು ಹಂತದಲ್ಲಿ 176 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆಗೆ ಸರ್ಕಾರದಿಂದ ಆಡಳಿತತ್ಮಾಕ ಮಂಜೂರಾತಿ ನೀಡಲಾಗಿದೆ. ಮೂಲಭೂತ ಸೌಕರ್ಯಗಳಿಗಾಗಿ ಪ್ರತಿ ಶಾಲೆಗೆ ₹10 ಲಕ್ಷ ಅನುದಾನ ಸರ್ಕಾರದಿಂದ ಬಿಡಗಡೆ ಮಾಡಲಾಗಿದೆ. ಸರ್ವಶಿಕ್ಷಣ ಅಭಿಯಾನದಡಿಯಲ್ಲಿ ಶಿಕ್ಷಣ ಇಲಾಖೆ ವಿವಿಧ ಕಾರ್ಯಕ್ರಮಗಳಿಗಾಗಿ ಸುಮಾರು ₹12.47 ಲಕ್ಷ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ADVERTISEMENT

ಉಡುಪಿಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ, ತಾಲ್ಲೂಕ ರಚನೆ ಮಾಡಿ ಹೊಸ ಕಚೇರಿ ತೆರೆಯಲು ಆದೇಶ ನೀಡಿದ್ದು. ಪ್ರಥಮ ಹಂತವಾಗಿ ಅಗತ್ಯವಿರುವ 17 ಮಂದಿ ಸಿಬ್ಬಂದಿಗಳ ಹುದ್ದೆ ಸೃಷ್ಟಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶ ವ್ಯಾಪ್ತಿಯ ಆಶ್ರಯ ವಸತಿ ನಿವೇಶನ ಹಂಚಿಕೆಯಲ್ಲಿ ಸರ್ಕಾರದಿಂದ ಸುಮಾರು 273 ಹಕ್ಕು ಪತ್ರಗಳನ್ನು ವಿತರಿಸುವ ಗುರಿ ಹೊಂದಿದ್ದು. ಈವರೆಗೂ 237 ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯವಲಯ ಕಾರ್ಯಕ್ರಮದಡಿ ಜಿಲ್ಲೆಗೆ ₹3.33 ಕೋಟಿ ಬಿಡುಗಡೆಯಾಗಿದೆ. ಸರ್ಕಾರಿ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ, ಶೌಚಾಲಯ ವ್ಯವಸ್ಥೆ ಹಾಗೂ ಇತರ ಮೂಲ ಸೌಕರ್ಯಗಳನ್ನು ಒದಗಿಸಲು ₹9.63 ಕೋಟಿ ನೀಡಲಾಗಿದೆ ಎಂದರು.

ಕೃಷಿ ಚಟುವಟಿಕೆ ಹಾಗೂ ಅಂತರ್ಜಲ ವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆ ₹16.50 ಕೋಟಿ ಅನುದಾನ ನೀಡಿದ್ದು, 27 ಕಿಂಡಿ ಅಣೆಕಟ್ಟುಗ ಹಾಗೂ ₹1.40 ಕೋಟಿ ವೆಚ್ಚದಲ್ಲಿ ನಾಲ್ಕು ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2017–18ನೇ ಸಾಲಿನ ಬಜೆಟ್‌ನಲ್ಲಿ ₹25.61 ಕೋಟಿ ಅನುದಾನ ನೀಡಲಾಗಿದ್ದು ಇದರಲ್ಲಿ 52ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ₹3.24 ಕೋಟಿ ವೆಚ್ಚದಲ್ಲಿ 10 ನದಿ ಸಂರಕ್ಷಣೆಗಾಗಿ ಕಾಮಗಾರಿ ಆರಂಭಿಸಲಾಗುತ್ತದೆ. ಪಶ್ಚಿಮವಾಹಿನಿ ಯೋಜನೆಯಡಿ ₹52.60ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಅಣೆಕಟ್ಟುಗಳ ನಿರ್ಮಾಣ ಕ್ರಿಯಾ ಯೋಜನೆ ಅನುಮೋದನೆಗೊಂಡಿದ್ದು ಅಂದಾಜು ಪಟ್ಟಿಯನ್ನು ಮಂಜೂರಾತಿಗೆ ಸಲ್ಲಿಸಲಾಗಿದೆ ಎಂದರು.

ಕೃಷಿ ಇಲಾಖೆ ನಿರ್ದೇಶಕ ಅಂಥೋನಿ ಮರಿಯಾ ಇಮಾನ್ಯೂಯಲ್, ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಎಚ್ ನಾಗಭೂಷಣ ಉಡುಪ , ಉಡುಪಿ ತಾಲ್ಲೂಕು ಪಂಚಾಯಿತಿ ಎನ್‌ಆರ್‌ಇಜಿ ಸಹಾಯಕ ನಿರ್ದೇಶಕ ಎಸ್.ಹರಿಕೃಷ್ಣ ಶಿವತ್ತಾಯ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಉಡುಪಿ ಹೋಬಳಿ ರಾಜಸ್ವ ನಿರೀಕ್ಷಕ ಸುಧಾಕರ್ ಶೆಟ್ಟಿ, ಉಡುಪಿ ವಲಯ, ಅಂಬಲಪಾಡಿ ಗಸ್ತು ಅರಣ್ಯ ರಕ್ಷಕ ದೇವರಾಜ್ ಪಾಣ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ್ ಬಾಬು, ತಾಲ್ಲೂಕು ಪಂಚಾಯಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧನ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.