ಪಡುಬಿದ್ರಿ: ಕಾಪು ತಾಲ್ಲೂಕಿನ ಎಲ್ಲೂರು ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ಉಡುಪಿ ಟಿಪಿಪಿ, ಸಿಎಸ್ಆರ್ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ ಮೂಲಕ ತಾಲ್ಲೂಕಿನ ಸರ್ಕಾರಿ, ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಪರಿಕರಗಳನ್ನು ವಿತರಿಸಿತು.
ಅದಾನಿ ಸಮೂಹದ ಕಾರ್ಯ ನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಅದಾನಿ ಫೌಂಡೇಷನ್ ಸಿಎಸ್ಆರ್ನ ವಾರ್ಷಿಕ ಬಜೆಟ್ನ ಶೇ 20ರಷ್ಟನ್ನು ಪ್ರತಿ ವರ್ಷ ಶಿಕ್ಷಣಕ್ಕೆ ಮೀಸಲಿಡುತ್ತಿದ್ದು, ಅದರಲ್ಲಿ ಶಾಲಾ ಪರಿಕರ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಸಹಾಯ, ಶಾಳೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡುತ್ತಿದೆ. ಈ ಬಾರಿ 85 ಸರ್ಕಾರಿ, ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ 7 ಸಾವಿರ ವಿದ್ಯಾರ್ಥಿಗಳಿಗೆ ₹40 ಲಕ್ಷ ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ವರ್ಷ ಉತ್ತಮ ಗುಣಮಟ್ಟದ ಪರಿಕರಗಳನ್ನು ನೀಡುವ ಮೂಲಕ ಅದಾನಿ ಫೌಂಡೇಷನ್ ಮಕ್ಕಳಿಗೆ ಅಧ್ಯಯನ ಸಾಮಗ್ರಿ ಮಾತ್ರವಲ್ಲದೆ ಆತ್ಮವಿಶ್ವಾಸ, ಗೌರವ, ಹೆಚ್ಚಿನ ವಿದ್ಯಾಭ್ಯಾಸ ಮುಂದುವರೆಸಲು ಹುರಿದುಂಬಿಸುತ್ತಿದೆ ಎಂದು ಹೇಳಿದರು.
ಅದಾನಿ ಸಮೂಹದ ಅದಾನಿ ಫೌಂಡೇಷನ್ ದೇಶದಾದ್ಯಂತ ಶಿಕ್ಷಣ, ಆರೋಗ್ಯ, ಶಾಶ್ವತ ಜೀವನೋಪಾಯ, ಗ್ರಾಮೀಣ ಕ್ರೀಡೆ, ಸಮುದಾಯ ಮೂಲಸೌಕರ್ಯ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ರಾಷ್ಟ್ರ ನಿರ್ಮಾಣದ ದೃಷ್ಟಿಕೋನದಿಂದ ಇದು ಗ್ರಾಮೀಣ, ಹಿಂದುಳಿದ ಸಮುದಾಯಗಳ ಜೀವನ ಸದೃಢಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದರು.
ಶಾಲಾ ನಿರ್ವಹಣಾ ಸಮಿತಿಗಳು ಈ ಯೋಜನೆಯನ್ನು ಸ್ವಾಗತಿಸಿ, ಶಿಕ್ಷಣ, ಆರೋಗ್ಯ, ಗ್ರಾಮೀಣ ಕ್ರೀಡೆ, ಮೂಲಸೌಕರ್ಯ ಅಭಿವೃದ್ಧಿ ಮುಂತಾದ ಕ್ಷೇತ್ರಗಳಲ್ಲಿ ಕಳೆದ ದಶಕದಿಂದ ಸೇವೆ ನೀಡುತ್ತಿರುವ ಅದಾನಿ ಫೌಂಡೇಷನ್ ಮಾದರಿ ಸಿಎಸ್ಆರ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಶ್ಲಾಘಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.