ADVERTISEMENT

ಅಗ್ನಿವೀರರಿಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ: ಕೋಟ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 12:36 IST
Last Updated 22 ಜೂನ್ 2022, 12:36 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಉಡುಪಿ: ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷಗಳ ಸೇವಾ ತರಬೇತಿ ಮುಗಿಸಿ ಹೊರಬರುವ ಅಗ್ನಿವೀರರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ 75ರಷ್ಟು ಮೀಸಲಾತಿ ನೀಡುವ ಯೋಚನೆ ಇದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಅಗ್ನಿಪಥ ಯೋಜನೆಗೆ ಸಹಕಾರ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೈಹಿಕ ಶಿಕ್ಷಣ ಶಿಕ್ಷಕರಾಗಲು ಅರ್ಹತೆ ಹೊಂದಿರುವ ಅಗ್ನಿವೀರರನ್ನು ಮೀಸಲಾತಿ ಹಾಗೂ ರೋಸ್ಟರ್ ನಿಯಮದಡಿ ನೇಮಕ ಮಾಡಿಕೊಳ್ಳಲಾಗುವುದು. ಈ ಸಂಬಂಧ ಪರಿಶೀಲನೆಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಟಿಪ್ಪಣಿ ನೀಡಲಾಗಿದೆ ಎಂದು ತಿಳಿಸಿದರು.

ಪಠ್ಯ ಪರಿಷ್ಕರಣೆ: ಸಮರ್ಥನೆ

ADVERTISEMENT

ಪಠ್ಯ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ಆದೇಶ ನೀಡಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಹಿಂದೆ ಪ್ರೊ.ಜಿ.ಎಸ್‌.ಮುಡಂಬಡಿತ್ತಾಯ ಸಮಿತಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿ ಯಾವ ಮಾನದಂಡಗಳ ಆಧಾರದ ಮೇಲೆ ಪಠ್ಯ ಪರಿಷ್ಕರಣೆ ಮಾಡಿದೆಯೋ ಅದೇ ಮಾನದಂಡಗಳಡಿ ರೋಹಿತ್ ಚಕ್ರತೀರ್ಥ ಸಮಿತಿಯೂ ಪಠ್ಯ ಪರಿಷ್ಕರಣೆ ಮಾಡಿದೆ ಎಂದು ಸಚಿವರು ಸಮರ್ಥಿಸಿಕೊಂಡರು.

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳ ಕುರಿತು ಸರ್ಕಾರ ಚರ್ಚಿಸಲಿದೆ. ಸಾಹಿತಿಗಳ ಆಕ್ಷೇಪಗಳು ಹಾಗೂ ಸಲಹೆಗಳನ್ನು ಪರಿಗಣಿಸಿ ಅವರಿಗೆ ಮನವರಿಕೆ ಮಾಡಿಕೊಡಲಿದೆ ಎಂದು ಕೋಟ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.