ಕುಂದಾಪುರ: ಅಧಿಕಾರಿಗಳು ರೈತರಿಗೆ ಕಾಲಕಾಲಕ್ಕೆ ಕೃಷಿ ಸಂಬಂಧಿತ ಅಗತ್ಯ ಮಾಹಿತಿ, ಮಾರ್ಗದರ್ಶನ ನೀಡಲು ರೈತ ಸಂಪರ್ಕ ಕೇಂದ್ರಗಳು ಬಳಕೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿ, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ರೈತರು ಮತ್ತು ಸರ್ಕಾರದ ಮಧ್ಯೆ ಸರ್ಕಾರಿ ಸಿಬ್ಬಂದಿ ಕೊಂಡಿಯಾಗಿರಬೇಕು. ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಸುಭಿಕ್ಷವಾಗಿರುತ್ತದೆ ಎಂದರು.
ಸರ್ಕಾರ ಯಾವುದೇ ಇದ್ದರೂ ರೈತರಿಗೆ ಕೃಷಿ ಚಟುವಟಿಕೆ, ಸಲಕರಣೆಗಳು, ಸಬ್ಸಿಡಿ ಸಿಗುವ ಬಗ್ಗೆ ಮಾಹಿತಿ ಸಿಗುವಂತಾಗಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ‘ಭತ್ತ್ ಕೃಷಿಗೆ ಹೆಚ್ಚಿನ ಬೆಂಬಲ ಬೆಲೆ ಸಿಗದ ಕಾರಣ ಜಿಲ್ಲೆಯ ವಿವಿಧೆಡೆ ಭತ್ತ ಕೃಷಿಯಿಂದ ರೈತರು ವಿಮುಖರಾಗುತ್ತಿದ್ದು, ಪರಿಹಾರ ಕಂಡುಕೊಳ್ಳಬೇಕು. ಅಗತ್ಯವಿರುವ ಬಿತ್ತನೆ ಬೀಜ ಪೂರೈಸಬೇಕು. ಕರಾವಳಿ ಭಾಗದ ಎಲ್ಲಾ ನದಿಗಳು ಸಮ ಮಟ್ಟದಲ್ಲಿದ್ದು ಹೂಳು ತೆಗೆಯುವ ಕಾರ್ಯಕ್ಕೆ ವೇಗ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಮುತುವರ್ಜಿ ವಹಿಸಬೇಕು ಎಂದು
ಹೇಳಿದರು.
ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಆಶಾ, ಕೃಷಿ ಇಲಾಖೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ, ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ, ಜಯರತ್ನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಮುಖಂಡರಾದ ಶಿವರಾಮ ಶೆಟ್ಟಿ ಮಲ್ಯಾಡಿ, ವಿಕಾಸ್ ಹೆಗ್ಡೆ ಭಾಗವಹಿಸಿದ್ದರು. ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ ಜೆ. ಮಾಡ ಸ್ವಾಗತಿಸಿದರು. ಶಿಕ್ಷಕ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ನಿರೂಪಿಸಿದರು. ಕುಂದಾಪುರ ಕೃಷಿ ಅಧಿಕಾರಿ ಗಾಯತ್ರಿ ದೇವಿ ವಂದಿಸಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕುಲಕ್ಷ್ಮೀ ಹೆಬ್ಬಾಳಕರ ಜಿಲ್ಲಾ ಉಸ್ತುವಾರಿ ಸಚಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.