ADVERTISEMENT

ಮಿತಿಮೀರಿದ ಭ್ರಷ್ಟಾಚಾರ: ಕಣ್ಮುಚ್ಚಿ ಕುಳಿತ ಸರ್ಕಾರ

ಆಪ್‌ ಪಕ್ಷದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಕೆ.ಮಥಾಯ್ ಆರೋಪ

​ಪ್ರಜಾವಾಣಿ ವಾರ್ತೆ
Published 27 ಮೇ 2022, 14:30 IST
Last Updated 27 ಮೇ 2022, 14:30 IST
ಆಮ್‌ ಆದ್ಮಿ ಪಕ್ಷದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಕೆ.ಮಥಾಯ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಮ್‌ ಆದ್ಮಿ ಪಕ್ಷದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಕೆ.ಮಥಾಯ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಹುದೊಡ್ಡ ಅವ್ಯವಹಾರ ನಡೆದಿದೆ. ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆಮ್‌ ಆದ್ಮಿ ಪಕ್ಷದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಕೆ.ಮಥಾಯ್ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಮ್‌ಆದ್ಮಿ ಪಕ್ಷ ಭ್ರಷ್ಟಾಚಾರ ಸಹಿಸುವುದಿಲ್ಲ. ಅವ್ಯವಹಾರ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತದೆ. ಆದರೆ, ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಧರ್ಮಗಳ ನಡುವೆ ದ್ವೇಷ ಹುಟ್ಟಿಹಾಕುತ್ತಿದ್ದು, ದೇಶವನ್ನು ಒಡೆಯುವ ಕೆಲಸ ಮಾಡುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭಾರತವು ಶ್ರೀಲಂಕಾದ ಹಾದಿ ಹಿಡಿಯಲಿದೆ ಎಂದರು.

ADVERTISEMENT

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸರ್ಕಾರದ ಮೇಲೆಯೇ ಹಿಡಿತ ಇಲ್ಲದಂತಾಗಿದೆ. ರಾಜ್ಯವನ್ನು ಲೂಟಿ ಮಾಡಲು ಗುತ್ತಿಗೆ ಕೊಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕನ್ ಸನೀಲ್ ಮಾತನಾಡಿ, ವಾರಾಹಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. ನಗರಕ್ಕೆ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲ. ಪ್ರವಾಸೋದ್ಯಮವನ್ನು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಸಂತೋಷ್ ಕಾಮತ್‌, ಎಸ್‌.ಆರ್‌.ಲೋಬೊ, ಆಶ್ಲಿ ಕರ್ನೆಲಿಯೊ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.