ಉಡುಪಿ: ಕವಿ ಮುದ್ದಣ ಮಾರ್ಗದಲ್ಲಿರುವ ನಗರಸಭೆ ಕಚೇರಿಯ ಎದುರು ನಡೆಯುತ್ತಿರುವ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಬೃಹತ್ ಕೃತಕ ಕೆರೆ ನಿರ್ಮಾಣವಾಗಿದ್ದು, ಅಕ್ಕಪಕ್ಕದ ಕಟ್ಟಡಗಳು ಶಿಥಿಲಗೊಳ್ಳುವ ಆತಂಕ ಎದುರಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದಿದ್ದ ಮಹಿಳೆಯರ ಹಾಗೂ ಮಕ್ಕಳ ಆಸ್ಪತ್ರೆಯನ್ನು ನೆಲಸಮಗೊಳಿಸಿ ಎರಡು ವರ್ಷಗಳ ಹಿಂದೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ವಿಶಾಲವಾದ ಸ್ಥಳದಲ್ಲಿ ಅರವತ್ತು ಅಡಿ ಆಳದ ಗುಂಡಿ ತೋಡಲಾಗಿದೆ. ಈಚೆಗೆ ಸುರಿದ ಭಾರಿ ಮಳೆಗೆ ಮೈಳೆಯ ನೀರು ಗುಂಡಿಗೆ ಹರಿದು ತುಂಬಿದ್ದು ಕೆರೆಯಂತೆ ಕಾಣುತ್ತಿದೆ.
ಬೃಹತ್ ಗುಂಡಿಯ ಅಂಚಿನ ಸುತ್ತ ಮಣ್ಣು ಕುಸಿಯುವ ಆತಂಕ ಎದುರಾಗಿದ್ದು ಅವಘಡ ಸಂಭವಿಸುವ ಸಾಧ್ಯತೆಗಳಿವೆ. ಮಣ್ಣು ಮೆದುವಾಗಿದ್ದು, ಭೂಕುಸಿತ ಸಂಭವಿಸುವ ಸಾಧ್ಯತೆಯೂ ಹೆಚ್ಚಾಗಿದೆ. ಗುಂಡಿಯ ಅಂಚಿನ ಸ್ಥಳಗಳಲ್ಲಿ ವಾಣಿಜ್ಯ ಸಂಕೀರ್ಣಗಳು, ಬಹುಮಹಡಿ ಕಟ್ಟಡಗಳು, ಅಪಾರ್ಟ್ಮೆಂಟ್ಗಳು ಇದ್ದು, ನಿವಾಸಿಗಳು ಆತಂಕದಲ್ಲಿ ಬದುಕುವಂತಾಗಿದೆ ಎಂದು ದೂರಿದ್ದಾರೆ.
ತುರ್ತಾಗಿ ಜಿಲ್ಲಾಡಳಿತ, ನಗರಸಭೆ ಅಪಾಯ ಆಹ್ವಾನಿಸುವ ಸ್ಥಳವನ್ನು ಭೂ ವಿಜ್ಞಾನಿಗಳ ಮೂಲಕ ಪರೀಕ್ಷಿಸಿ ಅವಘಡಗಳು ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.