
ಬೈಂದೂರು: ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡು ಹಳ್ಳಿಯಲ್ಲಿ ಹೈನುಗಾರಿಕೆ ನಡೆಸುವುದರಿಂದ ಉತ್ತಮ ಜೀವನ ಕಂಡುಕೊಳ್ಳಲು ಸಾಧ್ಯ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಹಕಾರದಿಂದ ಕರುಗಳ ಪ್ರದರ್ಶನ ಏರ್ಪಡಿಸಿರುವುದು ಒಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.
ಬೈಂದೂರಿನ ಯಡ್ತರೆಯಲ್ಲಿ ಭಾನುವಾರ ನಡೆದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬೈಂದೂರು ಉತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ಒಕ್ಕೂಟದ ನಿರ್ದೇಶಕರಾದ ಎಂ.ಸುಧಾಕರ ಶೆಟ್ಟಿ, ಕೆ.ಶಿವಮೂರ್ತಿ, ಮಮತಾ ಆರ್.ಶೆಟ್ಟಿ, ಡಿ.ವಿವೇಕ್, ವ್ಯವಸ್ಥಾಪಕ ರವಿರಾಜ ಉಡುಪ, ಸಮೃದ್ಧ ಬೈಂದೂರು ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ ಉಪ್ಪುಂದ, ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಬೈಂದೂರು ಉತ್ಸವದ ಸಂಚಾಲಕ ಶ್ರೀಗಣೇಶ ಉಪ್ಪುಂದ, ಉಪವ್ಯವಸ್ಥಾಪಕ ಶಂಕರ ನಾಯ್ಕ, ವಿಸ್ತರಣಾಧಿಕಾರಿ ವಾಸುದೇವ ಪುರಾಣಿಕ ಹಾಜರಿದ್ದರು.
ನಂದಿನಿ ಉಪವ್ಯವಸ್ಥಾಪಕ ಚಂದ್ರಶೇಖರ ಭಟ್ ಅವರು ಹೈನುಗಾರಿಕೆಯ ಬಗ್ಗೆ ಮಾಹಿತಿ ನೀಡಿದರು. ಪ್ರದರ್ಶನದಲ್ಲಿ ವಿವಿಧ ತಳಿಯ ಕರುಗಳ ವಿಭಾಗದ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಲಾವತಿ ಪ್ರಾರ್ಥಿಸಿದರು. ದ.ಕ.ಹಾಲು ಒಕ್ಕೂಟದ ನಿರ್ದೇಶಕ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಬೈಂದೂರು ತಾಲೂಕು ವಿಸ್ತರಣಾಧಿಕಾರಿ ರಾಜಾರಾಮ ಕಾರ್ಯಕ್ರಮ ನಿರೂಪಿಸಿದರು. ದ.ಕ. ಹಾಲು ಒಕ್ಕೂಟದ ನಿರ್ದೇಶಕ ಮಂಜಯ್ಯ ಶೆಟ್ಟಿ ಸಬ್ಲಾಡಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.