ADVERTISEMENT

‘ರಾಜ್ಯದ ಜನರಿಗೆ ಬಿಜೆಪಿಯೇ ಭರವಸೆ’

ಬಿಜೆಪಿ 'ವಿಜಯ ಸಂಕಲ್ಪ ಅಭಿಯಾನ' ಸ್ಟಿಕ್ಕರ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 13:09 IST
Last Updated 24 ಜನವರಿ 2023, 13:09 IST
ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ‘ವಿಜಯ ಸಂಕಲ್ಪ ಅಭಿಯಾನ'ದ ಸ್ಟಿಕ್ಕರ್ ಅನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಬಿಡುಗಡೆಗೊಳಿಸಿದರು.
ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ‘ವಿಜಯ ಸಂಕಲ್ಪ ಅಭಿಯಾನ'ದ ಸ್ಟಿಕ್ಕರ್ ಅನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಬಿಡುಗಡೆಗೊಳಿಸಿದರು.   

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗರಿಷ್ಠ ಮತಗಳ ಅಂತರದಿಂದ ಗೆಲಲ್ಲಿದೆ. 150 ಕ್ಷೇತ್ರಗಳಲ್ಲಿ ಗೆದ್ದು ರಾಜ್ಯದಲ್ಲೂ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ‘ವಿಜಯ ಸಂಕಲ್ಪ ಅಭಿಯಾನ'ದ ಸ್ಟಿಕ್ಕರ್ ಮತ್ತು ಗೋಡೆ ಬರಹ ಬಿಡುಗಡೆಗೊಳಿಸಿ ಮಾತನಾಡಿ, ಬಿಜೆಪಿಯು ಜನಪರ ಆಡಳಿತ, ವಿನೂತನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಸುಳ್ಳು ಹೇಳುವ ಮೂಲಕ, ಅಪಪ್ರಚಾರ ಮತ್ತು ಬೋಗಸ್ ಭಾಗ್ಯಗಳ ಆಸೆ ತೋರಿಸಿ ಜನರನ್ನು ಯಾಮಾರಿಸಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಜನತೆ ಪ್ರಬುದ್ಧರಾಗಿದ್ದು ಕಾಂಗ್ರೆಸ್‌ನ ಪೊಳ್ಳು ಆಮಿಷಗಳಿಗೆ ಬಲಿಯಾವುದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ಪಾಠ ಕಲಿಸಲಿದ್ದಾರೆ ಎಂದರು.

ADVERTISEMENT

ಜ.21ರಂದು ಜಿಲ್ಲೆಯಾದ್ಯಂತ ಆರಂಭವಾಗಿರುವ 'ವಿಜಯ ಸಂಕಲ್ಪ ಅಭಿಯಾನ'ದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹುಮ್ಮಸ್ಸಿನಿಂದ ತೊಡಗಿಸಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಜಾಲತಾಣ ವಿಭಾಗದ ಚಂದ್ರಶೇಖರ್ ಪ್ರಭು, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕ ಗೋಕುಲ್ ಕೃಷ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಮಂಡಲ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ, ನಗರ ಮಂಡಲ ಕಾರ್ಯದರ್ಶಿ ಆನಂದ್ ಸುವರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.