
ಉಡುಪಿ: ರಕ್ತದಾನವು ಮಾನವ ಜೀವ ಉಳಿಸುವ ಅತ್ಯಂತ ಶ್ರೇಷ್ಠ ದಾನ. ಇಂತಹ ಕಾರ್ಯಗಳು ಸಮಾಜದಲ್ಲಿ ಮಾನವೀಯತೆ, ಸಹಕಾರ ಮತ್ತು ಬಾಂಧವ್ಯವನ್ನು ವೃದ್ಧಿಸುತ್ತವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ ಹೇಳಿದರು.
ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ನಿಂದ ಇಂತಹ ಸಾಮಾಜಿಕ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದರು.
ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ನ ಪ್ರೊಫೆಸರ್ ಡಾ.ಶಮೀ ಶಾಸ್ತ್ರಿ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು.
ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ಸದಸ್ಯರಾದ ರಿಯಾಝ್ ಕುಕ್ಕಿಕಟ್ಟೆ ವಂದಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.