ADVERTISEMENT

ಬ್ರಹ್ಮಾವರ: ಗ್ರಾಮೀಣ ಪ್ರದೇಶಗಳಿಗೆ ಬಸ್ ಕಲ್ಪಿಸಲು ಮನವಿ

ಬ್ರಹ್ಮಾವರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಒಕ್ಕೊರಲಿನ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 12:28 IST
Last Updated 18 ಮಾರ್ಚ್ 2025, 12:28 IST
ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಬ್ರಹ್ಮಾವರ: ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಬಸ್ ಸೇವೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಗೋಪಿ ಕೆ. ನಾಯ್ಕ ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಬ್ರಹ್ಮಾವರ, ಹೆಬ್ರಿಯ ಪ್ರಮುಖ ಮಾರ್ಗದಲ್ಲೂ ಸರ್ಕಾರಿ ಬಸ್ ಸೇವೆ ಇಲ್ಲದಿರುವುದರಿಂದ ಆ ಭಾಗದ ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ತೀವ್ರ ಸಮಸ್ಯೆಯಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಕೆಲವು ಬಸ್‌ಗಳು ನಿಗದಿತ ನಿಲ್ದಾಣಗಳಲ್ಲಿ ನಿಲುಗಡೆ ನೀಡದ ಕಾರಣ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಸಂಬಂಧಿಸಿದ ಘಟಕಗಳ ಮೂಲಕ ನಿಗಮದ ವಾಹನ ಚಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿ, ನಿಗದಿತ ನಿಲುಗಡೆಯಲ್ಲಿ ಕಡ್ಡಾಯವಾಗಿ ನಿಲ್ಲಿಸುವಂತೆ ಮತ್ತು ಯಾವುದೇ ಸಮಸ್ಯೆಯಾಗದಂತೆ ಫಲಾನುಭವಿಗಳಿಗೆ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲು ತಿಳಿಸುವಂತೆ ಸದಸ್ಯರು ಆಗ್ರಹಿಸಿದರು.

ADVERTISEMENT

ಈ ಬಗ್ಗೆ ಉತ್ತರಿಸಿದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ವಾಹನ ಹಾಗೂ ಸಿಬ್ಬಂದಿ ಲಭ್ಯತೆಗೆ ಕ್ರಮ ವಹಿಸಿದ್ದು ಆದ್ಯತೆಯಾಗಿ ಪರಿಗಣಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಸುನೀತಾ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪಡಿತರ ವಿತರಣೆ ಕುರಿತಂತೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಅನಾವಶ್ಯಕ ವಿಳಂಬಕ್ಕೆ ಆಸ್ಪದವಿಲ್ಲದಂತೆ ಕ್ರಮ ವಹಿಸಬೇಕು. ಗೃಹಲಕ್ಷ್ಮೀ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಾಗೂ ಮಂಜೂರಾತಿ ವಿವರಗಳನ್ನು ನಿಗದಿತ ತಂತ್ರಾಂಶದಲ್ಲಿ ತಾಲ್ಲೂಕುವಾರು, ಪಂಚಾಯಿತಿವಾರು ಲಭ್ಯವಾಗುವಂತೆ ಸಂಬಂಧಿಸಿದ ಇಲಾಖೆಗಳು ಯೋಚಿಸಿದರೆ ಉತ್ತಮ ಎಂದು ಹೇಳಿದರು.

ಇಲಾಖಾವಾರು ಮಂಜೂರಾದ ಸೌಲಭ್ಯಗಳ ವರದಿ ಮಂಡಿಸಲಾಯಿತು. ತಾಂತ್ರಿಕ ಸಮಸ್ಯೆ ಹೊಂದಿರುವ ಫಲಾನುಭವಿಗಳಿಗೆ ಶೀಘ್ರ ಪರಿಹಾರ ನೀಡುವಂತೆ ಸಭೆಯಲ್ಲಿ ಒಕ್ಕೊರಲಿನ ಆಗ್ರಹ ವ್ಯಕ್ತವಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ. ಇಬ್ರಾಹಿಂಪುರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೋಟ, ಬ್ರಹ್ಮಾವರ ವ್ಯಾಪ್ತಿಯ ಮೆಸ್ಕಾಂ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ ನಿಗಮ, ಕೌಶಲಾಭಿವೃದ್ಧಿ ಸೇರಿದಂತೆ ಗ್ಯಾರಂಟಿ ಅನುಷ್ಠಾನ ವ್ಯಾಪ್ತಿಗೆ ಒಳಪಡುವ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿದ್ದರು. ಸಹಾಯಕ ನಿರ್ದೇಶಕ ಮಹೇಶ ಕೆ. ಸ್ವಾಗತಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ವಿಳಂಬವಿಲ್ಲದೆ ಲಭ್ಯವಿರುವ ಪಡಿತರವನ್ನು ಎಷ್ಟು ಶೀಘ್ರವಾಗಿ ತಲುಪಿಸಲು ಸಾಧ್ಯವೋ ಅಷ್ಟು ಶೀಘ್ರವಾಗಿ ವಿತರಣೆ ಮಾಡಬೇಕು
ಸುನೀತಾ ಶೆಟ್ಟಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.