ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪರಿಸರದಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹ ಸ್ಥಳಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿದರು
ಬ್ರಹ್ಮಾವರ: ಇಲ್ಲಿನ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ಪ್ರಕ್ರಿಯೆಯಲ್ಲಿ ನಡೆದ ವಂಚನೆ ಪ್ರಕರಣ ಕುರಿತಂತೆ ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಭರವಸೆ ನೀಡಿದರು.
ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಮತ್ತು ಅದರ ತನಿಖೆಯ ವಿಳಂಬ ನೀತಿ ವಿರುದ್ಧ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದ 45ನೇ ದಿನ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಪ್ರಾಸಿಕ್ಯೂಷನ್ಗೆ ಅನುಮತಿ ಸೇರಿದಂತೆ ರೈತ ಸಂಘದ ಬೇಡಿಕೆಗಳ ಈಡೇರಿಕೆಗೆ ತುರ್ತು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.
ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್ ಚಂದ್ರ ಶೆಟ್ಟಿ ಮಾತನಾಡಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ರೈತರ ಆಸ್ತಿ. ಇಲ್ಲಿನ ಹಗರಣವನ್ನು ತಪ್ಪಿಸಿ ರೈತರ ಹಿತ ಕಾಪಾಡುವುದು ಜಿಲ್ಲಾ ರೈತ ಸಂಘದ ಕರ್ತವ್ಯ, ಬದ್ಧತೆ. ಇಲ್ಲಿ ನಡೆಸುತ್ತಿರುವ ಪ್ರತಿಭಟನೆ ಪ್ರತಿಷ್ಠೆಗಾಗಿ ಅಲ್ಲ. ಪಕ್ಷ, ಜಾತಿಯನ್ನು ಮೀರಿ ನ್ಯಾಯಕ್ಕಾಗಿ ಹೋರಾಟ ಎಂದರು.
ಹಗರಣ ಕುರಿತು ಪ್ರಾರಂಭದಲ್ಲಿ ವಿವಿಧ ಇಲಾಖೆಗಳಿಗೆ ಮನವಿ ನೀಡಲಾಯಿತು. ಸ್ಪಂದನೆ ದೊರೆಯದಿದ್ದಾಗ ಕಾನೂನು ಹೋರಾಟ ಪ್ರಾರಂಭಿಸಲಾಯಿತು. ಅನಂತರವೂ ತನಿಖೆ ತೀರಾ ವಿಳಂಬವಾಗಿರುವುದರಿಂದ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸೂಕ್ತ ತನಿಖೆ ನಡೆದು ವಂಚಿಸಿದವರಿಗೆ ಶಿಕ್ಷೆ ಆಗಲೇಬೇಕು. ತಾರ್ಕಿಕ ಅಂತ್ಯ ಕಾಣಬೇಕು. ಪ್ರಾಸಿಕ್ಯೂಷನ್ಗೆ ಅನುಮತಿ ದೊರೆತ ತಕ್ಷಣ ಗೌರವಯುತವಾಗಿ ಪ್ರತಿಭಟನೆ ಹಿಂಪಡೆಯುತ್ತೇವೆ ಎಂದು ಅವರು ಹೇಳಿದರು.
ಪ್ರಮುಖರಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಎಂ.ಎ. ಗಫೂರ್, ಬಿ. ಭುಜಂಗ ಶೆಟ್ಟಿ, ಬಿ. ಸತೀಶ ಕಿಣಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.