
ಬೈಂದೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ತಾಲ್ಲೂಕು ರೈತ ಸಂಘದಿಂದ ಇಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 135 ದಿನ ಪೂರೈಸಿದ್ದು, ಬುಧವಾರ ಧರಣಿ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಭೇಟಿ ನೀಡಿದರು.
ರೈತ ಮುಖಂಡರೊಂದಿಗೆ ಮಾತನಾಡಿದ ಅವರು, ಬೈಂದೂರನ್ನು ಭೌಗೋಳಿಕವಾಗಿ ನೋಡಿದಾಗ ಸ್ಪಷ್ಟವಾಗಿ ಗ್ರಾಮೀಣ ಪ್ರದೇಶಗಳನ್ನು ಸೇರಿಸಿ ಅವೈಜ್ಞಾನಿಕವಾಗಿ ಪಟ್ಟಣ ಪಂಚಾಯಿತಿ ರಚನೆ ಮಾಡಿರುವುದು ಗೊತ್ತಾಗುತ್ತದೆ. ಜಿಲ್ಲಾಡಳಿತದಿಂದ ಸರ್ಕಾರಕ್ಕೆ ವರದಿಗಳನ್ನು ಕಳುಹಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು ನಿಮ್ಮ ಪ್ರಯತ್ನಕ್ಕೆ ಖಂಡಿತವಾಗಿಯೂ ಗೆಲುವು ಸಿಗಲಿದೆ ಎಂದರು.
ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ರೈತ ಸಂಘದ ಮುಂದಾಳತ್ವದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಬೇರ್ಪಡಿಸುವಂತೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಿಯಾದ ಕಾರಣ ನೀಡದೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಜಿಲ್ಲಾಡಳಿತ ಸರ್ಕಾರಕ್ಕೆ ದಾಖಲೆಗಳನ್ನು ನೀಡಿ ಸಹಕಾರ ನೀಡಿ ಸಮಸ್ಯೆ ಬಗೆಹರಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.
ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ತಹಶೀಲ್ದಾರ್ ರಾಮಚಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ, ರೈತ ಮುಖಂಡರಾದ ವೀರಭದ್ರ ಗಾಣಿಗ, ಅರುಣ್ ಕುಮಾರ್ ಶಿರೂರು, ಪದ್ಮಾಕ್ಷ ಗೋಳಿಬೇರು, ಸುಭಾಷ್ ಗಂಗನಾಡು, ಹೆರಿಯಣ್ಣ ಪೂಜಾರಿ, ರಾಮ ಮಯ್ಯಾಡಿ, ಸ್ಕರಿಯನ್, ನಾರಾಯಣ ಪೂಜಾರಿ ಯಳಜಿತ್, ಪೌಲೂಸ್, ಸುಬ್ರಹ್ಮಣ್ಯ ಬಿಜೂರು, ರೈತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.