ಉಡುಪಿ: ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಚಂದ್ರ ಕೆ.ಹೆಮ್ಮಾಡಿ ಜಾಮೀನು ಅರ್ಜಿಯನ್ನು ಶನಿವಾರ ಜಿಲ್ಲಾ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಬೈಂದೂರು ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ನೀಡುವಂತೆಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ.ಜೋಷಿ ಜಾಮೀನು ನಿರಾಕರಿಸಿದರು.
ಮುಗ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಜಾಮೀನು ಸಿಕ್ಕರೆ ಮಕ್ಕಳು ಭಯದಿಂದ ಬದುಕಬೇಕಾಗುತ್ತದೆ. ಹಾಗಾಗಿ, ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಿದರು ಎಂದು ಸರ್ಕಾರಿ ವಿಶೇಷ ಅಭಿಯೋಜಕರಾದ ವಿಜಯ ವಾಸು ಪೂಜಾರಿ ತಿಳಿಸಿದರು.
ಆರೋಪಿಯೊಬ್ಬನ ವಿರುದ್ಧ ಗರಿಷ್ಠ ಪೋಕ್ಸೋ ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಚಂದ್ರ ಹೆಮ್ಮಾಡಿ ವಿರುದ್ಧ 21 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, 20 ಪ್ರಕರಣಗಳಲ್ಲಿ ಬಾಡಿ ವಾರೆಂಟ್ನಲ್ಲಿದ್ದಾನೆ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.