ಉಡುಪಿ: ಬಾಲ್ಯಾವಸ್ಥೆಯಲ್ಲಿ ಮಕ್ಕಳ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಬೇಕು, ಶಿಕ್ಷಣದ ಜತೆಗೆ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಆರ್ಟಿಇ, ಬಾಲ ನ್ಯಾಯ ಮಂಡಳಿ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ಉದ್ದೇಶದಿಂದ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇದರಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂದರು.
ಈಚೆಗೆ ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು.ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಜನರ ಸಹಭಾಗಿತ್ವ ಮಹತ್ವದ್ದು ಎಂದರು.
ಕೋವಿಡ್ ಸಾಂಕ್ರಾಮಿಕ ಕಾಲಘಟ್ಟದಲ್ಲಿ ಮಕ್ಕಳಿಗೆ ನೇರ ಶಿಕ್ಷಣ ಸಿಗದಂತಾಗಿ ಮೊಬೈಲ್ಗಳಲ್ಲಿ ಶಿಕ್ಷಣ ಅನಿವಾರ್ಯವಾಗಿತ್ತು. ಪರಿಣಾಮ ಕೋವಿಡ್ ಕಡಿಮೆಯಾದರೂ ಮಕ್ಕಳು ಮೊಬೈಲ್ ಚಟ ಅಂಟಿಸಿಕೊಂಡಿರುವುದು ಕಂಡುಬರುತ್ತಿದೆ. ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರಬೇಕಾಗಿದೆ ಎಂದರು.
ಸಮಾಜದ ಅನಿಷ್ಠ ಪದ್ದತಿಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಸಂಪೂರ್ಣವಾಗಿ ನಿರ್ಮೂಲನೆಯಾಗುವಂತೆ ಅಗತ್ಯ ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಧಿಕಾರಿಗಳು ಕ್ರಮವಹಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಶರ್ಮಿಳಾ, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಪ್ರಸನ್ನ, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.