ಬೈಂದೂರು: ‘ಮಕ್ಕಳಿಗೆ ಚಿಕ್ಕಂದಿನಿಂದಲೇ ಕಲೆ, ಸಂಗೀತ, ನಾಟಕ ಮೊದಲಾದವುಗಳಲ್ಲಿ ಆಸಕ್ತಿ ಮೂಡುವಂತೆ ಮಾಡಿದರೆ ಮುಂದೆ ಅವರು ವಿಶೇಷ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ. ರಂಗಭೂಮಿಯು ಮನುಷ್ಯನ ಅಂತರಾಳವನ್ನು ಸಮಾಜದೆದುರು ಪ್ರದರ್ಶಿಸಲು ಇರುವ ವೇದಿಕೆಯಾಗಿದೆ’ ಎಂದು ರಂಗಕರ್ಮಿ ಬಿ. ವಿಶ್ವೇಶ್ವರ ಅಡಿಗ ಹೇಳಿದರು.
ಉಪ್ಪುಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗಸ್ಥಳ ಉಪ್ಪುಂದ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ಪೋಷಕರು, ಶಿಕ್ಷಕರು ಮಾಡಿದರೆ ಮಕ್ಕಳು ಇನ್ನಷ್ಟು ಎತ್ತರಕ್ಕೆ ಬೆಳೆಯುವ ಸಾಧ್ಯತೆ ಇರುತ್ತದೆ ಎಂದರು.
ರಂಗಸ್ಥಳ ಸಂಸ್ಥೆಯ ಅಧ್ಯಕ್ಷ ಯು.ಎಚ್.ರಾಜಾರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ರಂಗ ನಿರ್ದೇಶಕ ಸತ್ಯನಾ ಕೊಡೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ ಖಾರ್ವಿ ಇದ್ದರು.
ಜಯಾನಂದ ಪಟಗಾರ ಸ್ವಾಗತಿಸಿದರು. ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಆನಂದ ಗಾಣಿಗ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.