
ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಜರಗಿತು.
ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ‘ನಾವು ತೋರಿಸುವ ಪ್ರೀತಿ ತೋರ್ಪಡಿಕೆಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಮತ್ತು ಸೇವೆ ಕ್ರೈಸ್ತ ಧರ್ಮದ ಮೂಲ ತತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು’ ಎಂದರು.
ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಿಲ್ಸನ್ ಡಿಸೋಜ ಪರಮ ಪ್ರಸಾದ ಆರಾಧನೆ ನೆರವೇರಿಸಿದರು. ಬಳಿಕ ಪರಮ ಪ್ರಸಾದವನ್ನು ವಿಶೇಷವಾಗಿ ಅಲಂಕರಿಸಿದ, ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್ನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು.
ಮೌಂಟ್ ರೋಜರಿ ದೈವಾಲಯದ ಸಭಾಂಗಣದಲ್ಲಿ ದೈವವಾಕ್ಯದ ಪ್ರಬೋಧನೆಯನ್ನು ಮಿಲಾಗ್ರಿಸ್ ಕಾಥೆಡ್ರಲ್ ಸಹಾಯಕ ಗುರು ವಂದನೀಯ ಪ್ರದೀಪ್ ಕಾರ್ಡೋಜ ನೀಡಿದರು.
ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಿಲ್ಸನ್ ಡಿಸೋಜ ಮತ್ತು ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ರೋಕ್ ಡಿಸೋಜ ದೈವಾರಾಧನಾ ವಿಧಿಯನ್ನು ನಿರೂಪಿಸಿದರು. ರೊನಾಲ್ಡ್ ಸಲ್ಡಾನಾ ಧನ್ಯವಾದ ಸಲ್ಲಿಸಿದರು.
ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಸ್ಟೀಫನ್ ಡಿಸೋಜಾ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ಲೆಸ್ಲಿ ಡಿಸೋಜ, ಆಲ್ಬನ್ ಡಿಸೋಜಾ, ಚಾರ್ಲ್ಸ್ ಮಿನೇಜಸ್, ಧರ್ಮಪ್ರಾಂತ್ಯದ ಪಾಲನಾ ಸಮಿತಿ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.
Highlights - ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವ ಫಾ.ವಿಲ್ಸನ್ ಡಿಸೋಜರಿಂದ ಪರಮ ಪ್ರಸಾದದ ಆರಾಧನೆ ಫಾ ಪ್ರದೀಪ್ ಕಾರ್ಡೋಜರಿಂದ ದೈವವಾಕ್ಯದ ಪ್ರಬೋಧನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.