
ಸೈಕ್ಲೋಥಾನ್
ಉಡುಪಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ಇದೇ 18 ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಸಿ.ಐ.ಎಸ್.ಎಫ್. ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಕಾರ್ಯಕ್ರಮದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಂದೇ ಮಾತರಂ ಗೀತೆಯು 150 ವರ್ಷ ಪೂರೈಸಿರುವ ಕಾರಣ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್) ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ಅನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ರ್ಯಾಲಿಯು ಬೈಂದೂರು ತಾಲ್ಲೂಕಿನ ಶಿರೂರಿನಿಂದ ಪ್ರಾರಂಭವಾಗಿ ಕುಂದಾಪುರ-ಬ್ರಹ್ಮಾವರ-ಉಡುಪಿ- ಕಾಪು- ಹೆಜಮಾಡಿ ಮೂಲಕ ಸಂಚರಿಸಿ ಮುಂದೆ ಹಾದುಹೋಗಲಿದೆ ಎಂದು ಹೇಳಿದರು.
ಸೈಕ್ಲೋಥಾನ್ ರ್ಯಾಲಿಯ ಸ್ಪರ್ಧಾಳುಗಳನ್ನು ಸ್ಥಳೀಯ ಸಂಪ್ರದಾಯದೊಂದಿಗೆ ಅಂದು ಬೆಳಿಗ್ಗೆ 8.30 ಕ್ಕೆ ತ್ರಾಸಿಯಲ್ಲಿ ಸ್ವಾಗತಿಸಲಿದ್ದು, ಅಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ಸಮುದಾಯದ ಜನರೊಂದಿಗೆ ಸಂವಾದ ನಡೆ ಯಲಿದೆ. ಬೆಳಿಗ್ಗೆ 11.30 ಕ್ಕೆ ಬ್ರಹ್ಮಾವರದ ಆಶ್ರಯ ಹೋಟೆಲ್ ಸಭಾಂಗಣದಲ್ಲಿ ಹಾಗೂ ಸಂಜೆ 3.30 ಕ್ಕೆ ಕಾಪು ತಾಲ್ಲೂಕಿನ ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ಸಂವಾದ ನಡೆಯಲಿದೆ ಎಂದರು.
ಎನ್.ಎಂ.ಪಿ.ಎ. ಮಂಗಳೂರು ಸೆಂಟ್ರಲ್ ಇಂಡಸ್ಟ್ರೀಯಲ್ ಫೋರ್ಸ್ನ ರಾಜೇಂದ್ರ ಪ್ರಸಾದ್ ಪಾಠಕ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.