ಉಡುಪಿ: ಕೋವಿಡ್–19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಪ್ರಬಲ ಅಸ್ತ್ರಗಳಾಗಿದ್ದು, ಮಾಸ್ಕ್ ಧರಿಸದೆ ಸಾರ್ವಜನಿಕರು ಮನೆಯಿಂದ ಹೊರ ಬರಬಾರದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಬುಧವಾರ ಕೋರ್ಟ್ ರಸ್ತೆಯಲ್ಲಿ ಖುದ್ದು ರಸ್ತೆಗಳಿದು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ, ‘ಈಚೆಗೆ ನಾಗರಿಕರು ಸೋಂಕಿನ ಬಗ್ಗೆ ಅಲಕ್ಷ್ಯ ವಹಿಸುತ್ತಿರುವುದು ಹೆಚ್ಚಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿರುವುದು ಕಂಡುಬರುತ್ತಿದೆ. ಮುಖದ ಮೇಲಿರಬೇಕಾದ ಮಾಸ್ಕ್ ಕುತ್ತಿಗೆಗೆ, ತಲೆಯ ಮೇಲೆ ಸರಿಯುತ್ತಿದ್ದು, ಬೇಕಾಬಿಟ್ಟಿಯಾಗಿ ಧರಿಸಲಾಗುತ್ತಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುವ ಅಪಾಯ ಹೆಚ್ಚಾಗಿದ್ದು, ಜಿಲ್ಲಾಡಳಿತ ದಂಡ ಪ್ರಯೋಗಕ್ಕೆ ಮುಂದಾಗಿದೆ’ ಎಂದರು.
ಈಚೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆಗೆ ನಡೆದ ವಿಡಿಯೋ ಸಂವಾದದಲ್ಲಿಯೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಿಲ್ಲಾಡಳಿತಕ್ಕೆ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಅದರಂತೆ, ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ದಂಡ ಹಾಕುವ ಅಧಿಕಾರ ವಿಸ್ತರಣೆ:
ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಅಧಿಕಾರವನ್ನು ಹಿಂದೆ ಎಸ್ಐ, ಪಿಡಿಒ, ಪೌರಾಯುಕ್ತರು, ಆರೋಗ್ಯ ನಿರೀಕ್ಷಕರು, ಎಸಿ, ತಹಶೀಲ್ದಾರ್, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ತಾಲ್ಲೂಕು ಪಂಚಾಯಿತಿ ಇಒಗಳಿಗೆ ನೀಡಲಾಗಿತ್ತು. ಈಗ ಅಧಿಕಾರವನ್ನು ಎಎಸ್ಐಗಳಿಗೆ, ರಾಜಸ್ವ ನಿರೀಕ್ಷಕರಿಗೆ, ಅಬಕಾರಿ ಎಎಸ್ಐಗಳಿಗೆ ವಿಸ್ತರಿಸಲಾಗಿದೆ.
ಪ್ರತಿದಿನ ದಂಡ ವಿಧಿಸಿದ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕಾರ್ಯಾಚರಣೆ ನಡೆಯಲಿದ್ದು, ಮಾಸ್ಕ್ ಧರಿಸದವರಿಗೆ ಮುಲಾಜಿಲ್ಲದೆ ದಂಡ ವಿಧಿಸಲಾಗುತ್ತದೆ ಎಂದು ಡಿಸಿ ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಮನೆಯಿಂದ ಹೊರಡುವಾಗಲೇ ಮರೆಯದೆ ಮಾಸ್ಕ್ ಧರಿಸಬೇಕು. ವೈಯಕ್ತಿಕ, ಕುಟುಂಬದ ಸದಸ್ಯರ ಹಾಗೂ ಸಮುದಾಯದ ಸುರಕ್ಷತೆ ದೃಷ್ಟಿಯಿಂದ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.