ಉಡುಪಿ: ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಜಿಲ್ಲೆಯಲ್ಲಿ ಕಠಿಣ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಉಳಿದ ಸಮಯದಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸರ್ಕಾರದ ಮಾರ್ಗಸೂಚಿ ಬದಲಾವಣೆಯಾಗಿದ್ದು, ಸಾರ್ವಜನಿಕರ ಸಂಚಾರ ನಿರ್ಬಂಧಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಮನೆಯ ಸಮೀಪದ ಅಂಗಡಿಗಳಿಂದ ಖರೀದಿಸಬೇಕು. ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡಬಾರದು. ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಹೊರತುಪಡಿಸಿ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ ಎಂದರು.
ಪಾರ್ಸೆಲ್ಗೆ ಅವಕಾಶವಿದೆ:ಕರ್ಫ್ಯೂ ಅವಧಿಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ ಕೊಂಡೊಯ್ಯಲು ಮಾತ್ರ ಅವಕಾಶವಿದೆ. ವಸತಿ ನಿಲಯಗಳಲ್ಲಿ ಉಳಿದುಕೊಂಡವರು, ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ ಇಲ್ಲದವರು ಆಹಾರ ಕೊಂಡೊಯ್ಯಬಹುದು. ಆನ್ಲೈನ್ನಲ್ಲಿಯೂ ಆಹಾರ ತರಿಸಿಕೊಳ್ಳಬಹುದು ಎಂದರು.
ದೂರದ ನಗರಗಳಿಗೆ ಸಂಚರಿಸುವ ಬಸ್ಗಳು ಮಾತ್ರ ಇರಲಿವೆ. ಆಟೋ, ಟ್ಯಾಕ್ಸಿಗಳ ಸಂಚಾರ ಇರುವುದಿಲ್ಲ. ಯಾರಿಗೂ ಬಸ್ಗಳನ್ನು ಓಡಿಸುವಂತೆ ಒತ್ತಡ ಹಾಕುವುದಿಲ್ಲ. ಒಟ್ಟಾರೆ ನಾಗರಿಕರ ಸಂಚಾರಕ್ಕೆ ನಿರ್ಬಂಧ ಹಾಕುವುದು ವೀಕೆಂಡ್ ಕರ್ಫ್ಯೂ ಆಶಯ ಎಂದು ಜಿಲ್ಲಾಧಿಕಾರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.