ADVERTISEMENT

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗೆ ನಿಗದಿತ ದರ: ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 14:44 IST
Last Updated 8 ಮಾರ್ಚ್ 2021, 14:44 IST
ಜಿಲ್ಲಾಧಿಕಾರಿ ಜಿ.ಜಗದೀಶ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿ ಜಿ.ಜಗದೀಶ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ಉಡುಪಿ: 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರ‍್ರೆಗಳಲ್ಲಿ ಉಚಿತವಾಗಿ ಕೋವಿಡ್‌ ಲಸಿಕೆ ಹಾಕಲಾಗುವುದು. ನೋಂದಾಯಿತ 14 ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರ ಪಾವತಿಸಿ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸೋಮವಾರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಸಂಪೂರ್ಣ ಉಚಿತವಾಗಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಡೋಸ್‌ಗೆ ₹250 ನೀಡಬೇಕು. ಫಲಾನುಭವಿಗಳು ಲಸಿಕೆ ಪಡೆಯಲು ಆನ್‌ಲೈನ್ ಮೂಲಕ ದಿನಾಂಕ ಆಯ್ಕೆಮಾಡಿಕೊಳ್ಳಬಹುದು. ಲಸಿಕೆ ಪಡೆಯಲು ವೆಬ್‌ಸೈಟ್: https://selfregistration.cowin.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ನೆಟ್‌ವರ್ಕ್‌ ಸಮಸ್ಯೆ ಇರುವ ಗ್ರಾಮೀಣ ಭಾಗಗಳಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ತೋರಿಸಿ ಲಸಿಕಾ ಕೆಂದ್ರಕ್ಕೆ ಬಂದು ನೋಂದಣಿ ಮಾಡಿಸಿಕೊಂಡು ಅದೇ ದಿನ ಲಸಿಕೆ ಪಡೆಯಬಹುದು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ರಿಂದ 59 ವಯಸ್ಸಿನ 1,51,557 ಮಂದಿಗೆ ಲಸಿಕೆ ಹಾಕುವ ಗುರಿ ಇದ್ದು, 82,100 ಡೋಸ್ ಕೋವಿಶೀಲ್ಡ್ ಲಸಿಕೆ ಸರಬರಾಜಾಗಿದೆ. 49,200 ಲಸಿಕೆಗಳನ್ನು ಹಿರಿಯ ನಾಗರಿಕರಿಗೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ADVERTISEMENT

ಎಲ್ಲ ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ರಜಾದಿನ ಹೊರತುಪಡಿಸಿ ಲಸಿಕೆ ಪಡೆಯಬಹುದು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೆಂದ್ರಗಳಲ್ಲಿ ಮಂಗಳವಾರ, ಗುರುವಾರ ಹೊರತುಪಡಿಸಿ ಎಲ್ಲ ಕೆಲಸದ ದಿನಗಳಂದು ಲಸಿಕೆ ಪಡೆಯಬಹುದು ಎಂದರು.

ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆದ ಬಳಿಕ ಮೂವರಿಗೆ ಮಾತ್ರ ವ್ಯತಿರಿಕ್ತ ಪರಿಣಾಮ ಬೀರಿದ್ದು, ಲಸಿಕೆಯಿಂದ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂಬುದು ದೃಡಪಟ್ಟಿದೆ. ಮೂವರೂ ಸುರಕ್ಷಿತವಾಗಿದ್ದಾರೆ. ಸಾರ್ವಜನಿಕರು ಲಸಿಕೆ ಬಗ್ಗೆ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಡಿಸಿ ಹೇಳಿದರು.

ಉಡುಪಿಗೆ ನೆರೆಯ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ 72 ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ತರಬೇಕು. ವ್ಯವಹಾರಿಕ ಉದ್ದೇಶಗಳಿಗೆ ನಿರಂತರವಾಗಿ ಓಡಾಡುವವರು 15 ದಿನಗಳಿಗೊಮ್ಮ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೆಗೆಟಿವ್ ವರದಿ ಇಲ್ಲದೆ ಜಿಲ್ಲೆಗೆ ಬರುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

ಕೋವಿಡ್ ಸಂಪೂರ್ಣವಾಗಿ ನಾಶವಾಗಿಲ್ಲ. ಸಾರ್ವಜನಿಕರು ಕೋವಿಡ್ ಇಲ್ಲ ಎಂಬ ಭಾವನೆಯಿಂದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ಇಂತಹ ಪ್ರವೃತ್ತಿ ಸಲ್ಲದು. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿಸಿ ಸಿಇಒ ಡಾ.ನವೀನ್ ಭಟ್, ಡಿಎಚ್‌ಒ ಡಾ.ಸುಧೀರ್ ಚಂದ್ರ ಸೂಡಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.