ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 84 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ ತಾಲ್ಲೂಕಿನಲ್ಲಿ 33, ಕುಂದಾಪುರದಲ್ಲಿ 40 ಹಾಗೂ ಕಾರ್ಕಳದಲ್ಲಿ 11 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 47 ಪುರುಷರು, 32 ಮಹಿಳೆಯರು ಹಾಗೂ ಐದು ಮಕ್ಕಳು ಸೇರಿದ್ದಾರೆ.
ಶೀತಜ್ವರದ ಲಕ್ಷಣಗಳಿದ್ದ 13 ಜನರಲ್ಲಿ, ಸಾರಿ ಲಕ್ಷಣಗಳಿದ್ದ ನಾಲ್ವರಲ್ಲಿ, ಮಹಾರಾಷ್ಟ್ರದಿಂದ ಬಂದಿದ್ದ 7, ಮಂಗಳೂರು ಪ್ರಯಾಣ ಸಂಪರ್ಕವಿದ್ದ ಮೂವರು, ಬೆಂಗಳೂರು ಪ್ರಯಾಣ ಹಿನ್ನೆಲೆಯ 6, ದುಬೈ ಹಾಗೂ ಅಬುದಾಬಿಯಿಂದ ಬಂದಿದ್ದ ಇಬ್ಬರಲ್ಲಿ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 49 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ.
ಸೋಂಕಿತ ಸಾವು
‘ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದ 80 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರಿಗೆತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ 213 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 414 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದ 32 ಜನರನ್ನು ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ 81 ಮಂದಿ ಸೇರಿ ಜಿಲ್ಲೆಯಲ್ಲಿ ಇದುವರೆಗೂ 1,543 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 429 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ.ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1979ಕ್ಕೇರಿಕೆಯಾಗಿದ್ದು, ಇದುವರೆಗೂ 8 ಜನ ಸೋಂಕಿತರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.