ಕಾಪು (ಪಡುಬಿದ್ರಿ): ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಲಸಿಕೆ ವಿತರಣೆಗೆ ಮುಂದಾಗಿದ್ದು, ಆದ್ಯತೆಯ ಮೇರೆಗೆ ಲಸಿಕೆ ವಿತರಿಸಲು ಮುತುವರ್ಜಿ ವಹಿಸಲಾಗಿದೆ. ಜನರು ಆತಂಕಕ್ಕೆ ಒಳಗಾಗದೆ, ಕೋವಿಡ್ ನಿಯಮಗಳನ್ನು ಪಾಲಿಸಿ, ಸಾಂಕ್ರಾಮಿಕ ಕಾಯಿಲೆ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಜನಸಂಖ್ಯೆ 138 ಕೋಟಿ ಇದೆ. ಎಲ್ಲರಿಗೂ ಏಕಕಾಲಕ್ಕೆ ಲಸಿಕೆ ನೀಡುವುದು ಕಷ್ಟ. ದೇಶದಲ್ಲಿ ಈವರೆಗೆ ಸುಮಾರು 35 ಕೋಟಿ ಜನರಿಗೆ ಲಸಿಕೆ ವಿತರಿಸಿರುವುದು ಹೆಮ್ಮೆಪಡುವಂತಹ ಸಾಧನೆ ಎಂದರು.
ಶಾಸಕರ ಶಿಫಾರಸಿನಂತೆ ರಾಜ್ಯ ಸರ್ಕಾರವು ಕಾಪು ವಿಧಾನಸಭಾ ಕ್ಷೇತ್ರಕ್ಕೆ ನೀಡಿರುವ ನಾಲ್ಕು ಆಮ್ಲಜನಕ ಸಾಂದ್ರಕಗಳನ್ನು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.
ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಬ್ರಾಯ ಕಾಮತ್, ಡಾ. ರೇಷ್ಮಾ, ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸುರೇಶ್ ಪ್ರಭು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.