ಬಂಧನ
(ಪ್ರಾತಿನಿಧಿಕ ಚಿತ್ರ)
ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಕುಂಜಾಲು ಜಂಕ್ಷನ್ ಬಳಿ ದನದ ತಲೆ ಮತ್ತು ಚರ್ಮದ ಭಾಗಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕುಂಜಾಲುವಿನ ರಾಮ (49), ಪ್ರಸಾದ್(21), ಸಂದೇಶ(35) ರಾಜೇಶ್ (28) ಮಟಪಾಡಿಯ ನವೀನ್(35), ಅಡ್ಜಿಲದ ಕೇಶವ ನಾಯ್ಕ್ (50) ಬಂಧಿತ ಆರೋಪಿಗಳು. ಇನ್ನೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾನೆ. ದನದ ಮಾಂಸ ಸಾಗಿಸಲು ಬಳಸಿದ್ದ ಆ್ಯಕ್ಟಿವಾ ಸ್ಕೂಟರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಶವ ನಾಯ್ಕ್ ಅವರಿಗೆ ದನವನ್ನು ಸಾಕಲು ಸಾಧ್ಯವಾಗದ ಕಾರಣ ಆರೋಪಿಗಳಿಗೆ ನೀಡಿದ್ದರು. ಅವರು ಮಾಂಸಕ್ಕಾಗಿ ಅದನ್ನು ಕೊಂದು ಅದರ ದೇಹದ ಭಾಗಗಳನ್ನು ಸ್ಕೂಟರ್ನಲ್ಲಿ ಸಾಗಿಸುವಾಗ ರುಂಡ ರಸ್ತೆಗೆ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ತಿನ್ನುವ ಉದ್ದೇಶಕ್ಕೆ ಅವರು ಮಾಂಸ ಸಾಗಾಟ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.
ಇಂತಹ ಪ್ರಕರಣಗಳು ನಡೆದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಪ್ರಚೋದಿಸುವ ಪೋಸ್ಟ್ಗಳನ್ನು ಮಾಡಬಾರದು ಎಂದು ಜನರಲ್ಲಿ ಅವರು ಮನವಿ ಮಾಡಿದ್ದಾರೆ.
ದನದ ತಲೆ ಪತ್ತೆಯಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ್ದ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿಭಟನಾ ಸಭೆ ನಡೆಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.