ADVERTISEMENT

ಗೋವುಗಳ ರಕ್ಷಣೆಗೆ ಪಶು ಸಂಜೀವಿನಿ ಆಂಬುಲೆನ್ಸ್‌: ಸಚಿವ ಪ್ರಭು ಚವ್ಹಾಣ್‌

ದೇಸಿ ಗೋಪಾಲಕರ, ಕೃಷಿಕರ ಸಮ್ಮೇಳನ ಉದ್ಘಾಟಿಸಿದ ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್‌

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 16:17 IST
Last Updated 12 ಡಿಸೆಂಬರ್ 2021, 16:17 IST
ಉಡುಪಿಯ ಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ 'ವಿಶ್ವಾರ್ಪಣಂ' ಸಮಾರಂಭದ ಅಂಗವಾಗಿ ನಡೆದ ರಾಜ್ಯಮಟ್ಟದ ದೇಸಿ ಗೋಪಾಲಕರ, ಕೃಷಿಕರ ಹಾಗೂ ಗೋ ಉತ್ಪನ್ನ ತಯಾರಕರ ಸಮ್ಮೇಳನದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಗೋವುಗಳಿಗೆ ಪೂಜೆ ಸಲ್ಲಿಸಿದರು. ಅದಮಾರು ಮಠದ ಈಶಪ್ರಿಯ ಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.
ಉಡುಪಿಯ ಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ 'ವಿಶ್ವಾರ್ಪಣಂ' ಸಮಾರಂಭದ ಅಂಗವಾಗಿ ನಡೆದ ರಾಜ್ಯಮಟ್ಟದ ದೇಸಿ ಗೋಪಾಲಕರ, ಕೃಷಿಕರ ಹಾಗೂ ಗೋ ಉತ್ಪನ್ನ ತಯಾರಕರ ಸಮ್ಮೇಳನದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಗೋವುಗಳಿಗೆ ಪೂಜೆ ಸಲ್ಲಿಸಿದರು. ಅದಮಾರು ಮಠದ ಈಶಪ್ರಿಯ ಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.   

ಉಡುಪಿ: ಗೋವುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಅನಾರೋಗ್ಯ ಪೀಡಿತ ಹಾಗೂ ಅವಘಡಗಳಲ್ಲಿ ಗಂಭೀರವಾಗಿ ಗಾಯಗೊಂಡ ಗೋವುಗಳಿಗೆ ಶುಶ್ರೂಷೆ ನೀಡಲು ಪ್ರತಿ ತಾಲ್ಲೂಕಿಗೆ ಪಶು ಸಂಜೀವಿನಿ ಆಂಬುಲೆನ್ಸ್‌ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.

ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದೇಸಿ ಗೋಪಾಲಕರ, ಕೃಷಿಕರ ಹಾಗೂ ಗೋ ಉತ್ಪನ್ನ ತಯಾರಕರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಪಶು ಸಂಜೀವಿನಿ ಆಂಬುಲೆನ್ಸ್‌ ಟೆಂಡರ್ ಮುಗಿದಿದ್ದು, 275 ಆಂಬುಲೆನ್ಸ್‌ಗಳನ್ನು ಖರೀದಿಸಲಾಗುತ್ತಿದೆ. ಆಂಬುಲೆನ್ಸ್‌ನಲ್ಲಿ ವೈದ್ಯರು ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಸಲಕರಣೆಗಳು ಇರಲಿವೆ. 1962 ನಂಬರ್‌ಗೆ ಕರೆ ಮಾಡಿದರೆ ಆಂಬುಲೆನ್ಸ್‌ ಸ್ಥಳಕ್ಕೆ ಬಂದು ಗೋವುಗಳಿಗೆ ಚಿಕಿತ್ಸೆ ನೀಡಲಿದೆ ಎಂದರು.

ADVERTISEMENT

ಉತ್ತರ ಪ್ರದೇಶ ಹಾಗೂ ಗುಜರಾತ್‍ನಲ್ಲಿ ಅಧ್ಯಯನ ನಡೆಸಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿತ್ತು. ಕಾಯ್ದೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗಿದ್ದು, ತೀರ್ಪು ಸರ್ಕಾರದ ಪರವಾಗಿ ಬರುವ ವಿಶ್ವಾಸವಿದೆ ಎಂದು ಸಚಿವರು ತಿಳಿಸಿದರು.

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬಳಿಕ 10,000ಕ್ಕೂ ಹೆಚ್ಚು ಗೋವುಗಳ ರಕ್ಷಣೆಯಾಗಿದೆ. 500ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ‍ಪರವಾಗಿ ತೀರ್ಪು ಬಂದರೆ ಆರೋಪಿಗಳಿಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಿಸಲಾಗುವುದು. ಕಾಯ್ದೆಯಲ್ಲಿ ಗರಿಷ್ಠ 7 ವರ್ಷ ಜೈಲು ಶಿಕ್ಷೆಗೆ ಅವಕಾಶವಿದೆ ಎಂದರು.

ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ಯುವ ಸಮುದಾಯ ಗೋವುಗಳನ್ನು ಸಂಪತ್ತು ಎಂದು ಅರಿಯಬೇಕು ಎಂದರು. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಜಿ. ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.