ಉಡುಪಿ: ಮುಂದಿನ ಐದು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ‘ತೌಕ್ತೆ’ ಚಂಡಮಾರುತದ ಪ್ರಭಾವದಿಂದ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಮೇ 14ರಂದು ಆರೆಂಜ್ ಅಲರ್ಟ್, 15 ಹಾಗೂ 16ರಂದು ರೆಡ್ ಅಲರ್ಟ್, 17 ಹಾಗೂ 18ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 14ರಂದು 64.4ರಿಂದ 115.5 ಮಿ.ಮೀ., 15ರ ಬೆಳಿಗ್ಗೆ 8.30ರವರೆಗೆ 115.6ರಿಂದ 204.4 ಮಿ.ಮೀ, 15ರ ಬೆಳಿಗ್ಗೆ 8.30ರಿಂದ 17ರ ಬೆಳಿಗ್ಗೆ 8.30ರವರೆಗೆ 204.5 ಮಿ.ಮೀ.ಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಮೇ 18 ಬೆಳಿಗ್ಗೆ 8.30ರವರೆಗೆ 115.6 ಇಂದ 204.4 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಮೀನುಗಾರರು ನದಿ, ಸಮುದ್ರಕ್ಕೆ ಇಳಿಯಬಾರದು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ನಿಲ್ಲಬಾರದು.
ತುರ್ತು ಸೇವೆಗಾಗಿ 1077 ಅಥವಾ ದೂರವಾಣಿ 0820- 2574802ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.