ಉಡುಪಿ: ಜಿಲ್ಲಾಡಳಿತವೇ ಜನರ ಬಳಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ' ಕಾರ್ಯಕ್ರಮಕ್ಕೆ ಶನಿವಾರ ಬ್ರಹ್ಮಾವರ ತಾಲ್ಲೂಕಿನಲ್ಲಿ ಚಾಲನೆ ದೊರೆಯಿತು.
15ನೇ ನಾಲ್ಕೂರು ಗ್ರಾಮಕ್ಕೆ ಭೇಟಿನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡಕ್ಕೆ ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿದರು. ಚೆಂಡೆಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು. ಮೊದಲು ಗ್ರಾಮದ ಪ್ರೌಢಶಾಲೆಗೆ ತೆರಳಿ ಕೆಲ ಹೊತ್ತು ಪಾಠ ಮಾಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಬಳಿಕ ನಾಲ್ಕೂರಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಕುಡಬಿ ಜನಾಂಗದವರು ಹೆಚ್ಚಿರುವ ಕಜೆಕೆಗೆ ತೆರಳಿ ಭೂಮಿ ಸಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಅರ್ಜಿಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಭರವಸೆ ನೀಡಿದರು. ನಂತರ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವತಃ ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಂಡು ಕೇಂದ್ರದ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಾರಾಡಿಯ ದಲಿತರ ಕಾಲೋನಿ, ನೆಂಚಾರು ಸ್ಮಶಾನ ಜಾಗಕ್ಕೂ ಭೇಟಿನೀಡಿ ಅಹವಾಲು ಆಲಿಸಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ 147 ಅರ್ಜಿಗಳು ಸಲ್ಲಿಕೆಯಾದವು. ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಇತ್ಯರ್ಥಗೊಂಡರೆ, ಕೆಲವು ಅರ್ಜಿಗಳನ್ನು ಮುಂದಿನ ಹಂತದಲ್ಲಿ ಪರೀಶೀಲಿಸಲು ಜಿಲ್ಲಾಧಿಕಾರಿ ಸೂಚಿಸಿದರು. ‘ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ’ ರಾಜ್ಯದ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬಂದಿದ್ದು, ಉತ್ತಮ ಸ್ಪಂದನ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.