ಉಡುಪಿ: ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ, ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಿಂದಾಗಿ ಬೆಳೆ ನಾಶ ಉಂಟಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿಯ ಜಂಟಿ ಸಮೀಕ್ಷೆ ನಡೆಸಿ ಮಾಹಿತಿಯನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದರು.
ಎನ್.ಡಿ.ಆರ್.ಎಫ್. ತಂಡಗಳು ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕಾರ್ಯಗಳ ಬಗ್ಗೆ ಸಮುದಾಯ ಅರಿವು ಕಾರ್ಯಕ್ರಮಗಳನ್ನು ಮೀನುಗಾರರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದರಿಂದರೊಂದಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಹಾಗೂ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರಗಳ ಕಂಟ್ರೋಲ್ ರೂಂ ಗಳು ದಿನದ 24 ಗಂಟೆಯೂ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ತಾಲ್ಲೂಕು ಮಟ್ಟದ ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್ಪಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ ಎಸ್., ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಾಕೃತಿಕ ವಿಕೋಪ ಸಂಭವಿಸಿದರೆ ಕೂಡಲೇ ಸ್ಪಂದಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು. ಪರಿಹಾರ ವಿತರಿಸುವ ಮುನ್ನ ನಿಖರ ಮಾಹಿತಿಯನ್ನು ಕ್ರೋಡೀಕರಿಸಿಕೊಳ್ಳಬೇಕುಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ
ಹೆಚ್ಚಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ಬಾಧಿಸಿದೆ. ಅದರ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ವಿಜ್ಞಾನಿಗಳು ಸಂಶೋಧಕರು ಒಳಗೊಂಡ ತಂಡವು ರೈತರ ತೋಟಗಳಿಗೆ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಕಂಡುಕೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ರೈತರಿಗೆ ಬೋರ್ಡಲಿನ್ ದ್ರಾವಣ ಕಾಪರ್ ಸಲ್ಪೈಟ್ ಸೇರಿದಂತೆ ಮತ್ತಿತರ ಔಷಧಿಗಳ ಸಿಂಪರಣೆಗೆ ಸಹಾಯಧನ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.