ಬ್ರಹ್ಮಾವರ: ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ನಿರ್ದೇಶನದಂತೆ ಬ್ರಹ್ಮಾವರ ತಾಲ್ಲೂಕಿನ ಕೋಡಿ ಕನ್ಯಾಣ ಹೊಳೆಯಲ್ಲಿ ಹೂಳು ತೆಗೆದು, ನದಿ ಒತ್ತುವರಿ ಪ್ರದೇಶವನ್ನು ಪುನಶ್ಚೇತನಗೊಳಿಸಲು ಪೂರಕ ಕ್ರಮ ಕೈಗೊಳ್ಳುವ ಪ್ರಯುಕ್ತ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಈಚೆಗೆ ಭೇಟಿ ನೀಡಿ, ಪರಿಶೀಲಿಸಿದರು.
ಮಂಗಳೂರಿನ ಮೀನುಗಾರಿಕೆ ಕಾಲೇಜು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ, ಅರಣ್ಯ, ಬಂದರು ಮೀನುಗಾರಿಕೆ ಹಾಗೂ ಮೀನುಗಾರಿಕಾ ಕಾಲೇಜು ಸಹಯೋಗದಲ್ಲಿ ಪುನಶ್ಚೇತನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಂಬಂಧ ಪೂರ್ವಭಾವಿ ಸಭೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿತ್ತು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕೋಡಿ ಕನ್ಯಾಣ ಹೊಳೆಯಲ್ಲಿ ಹೂಳು ತೆಗೆದು ನದಿಯನ್ನು ಒತ್ತುವರಿ ಮಾಡಿರುವ ಪ್ರದೇಶವನ್ನು ಪುನಶ್ಚೇತನ ಗೊಳಿಸುವ ಸಂಬಂಧ ಜಂಟಿಯಾಗಿ ವಿಸ್ತ್ರತ ಯೋಜನಾ ವರದಿಯನ್ನು ತಯಾರು ಮಾಡಲು ಮಾಹಿತಿಯನ್ನು ಕಲೆ ಹಾಕಬೇಕು, ಅರಣ್ಯ, ಬಂದರು, ಸಣ್ಣ ನೀರಾವರಿ, ಕರಾವಳಿ ವಲಯ ನಿಯಂತ್ರಣ ಪ್ರಾಧಿಕಾರ, ಮೀನುಗಾರಿಕೆ ಹಾಗೂ ಮೀನುಗಾರಿಕಾ ಕಾಲೇಜು, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 10 ದಿನಗಳೊಳಗೆ ವರದಿಯನ್ನು ಸಲ್ಲಿಸುವಂತೆ ತಿಳಿಸಿದ್ದರು.
ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೋಡಿ ಕನ್ಯಾಣ ಪ್ರದೇಶಕ್ಕೆ ಭೇಟಿ ನೀಡಿದರು.
ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ, ಕೋಡಿ ಗ್ರಾಮ ಲೆಕ್ಕಿಗ ಗಿರೀಶ, ಸಹಾಯಕಿ ಸರೋಜಾ, ಅರಣ್ಯಾಧಿಕಾರಿ ವಾರಿಜಾಕ್ಷಿ, ಪ್ರವಾಸೋದ್ಯಮ ಇಲಾಖೆಯ ಇಲಾಖಾಧಿಕಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.