ಉಡುಪಿ:ಆರ್ಥಿಕ ಇಲಾಖೆಯ ಮೂಲಕ ₹60 ಕೋಟಿಗೂ ಹೆಚ್ಚು ಮೀನುಗಾರರ ಸಾಲಮನ್ನಾ ಹಣ ಬಿಡುಗಡೆಯಾಗಿದ್ದು, ಫಲಾನುಭವಿಗಳ ವಿವರ ದಾಖಲಿಸುವ ಕಾರ್ಯ ಅಂತಿಮ ಹಂತದಲ್ಲಿದೆ. ಶೀಘ್ರ ಸಾಲಗಾರರ ಖಾತೆಗೆ ಹಣ ಜಮಾ ಆಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮೀನುಗಾರರ ಸಾಲಮನ್ನಾ ಕುರಿತು ರಾಷ್ಟ್ರೀಕೃತ ಬ್ಯಾಂಕ್ಗಳ ಹಿರಿಯ ಅಧಿಕಾರಿಗಳು ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹಾಗೂ ಪ್ರಮುಖ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಈಗಾಗಲೇಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರಿಕಾ ಸಹಕಾರ ಸಂಘಗಳ ಕಾರ್ಯದರ್ಶಿಗಳು ಸಾಲ ನೀಡಿರುವ ಬ್ಯಾಂಕುಗಳ ಸಂಪರ್ಕದಲ್ಲಿದ್ದು, ಸಹಕಾರ ನೀಡುತ್ತಿದ್ದಾರೆ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಹೆಚ್ಚುವರಿ ಜಿಲ್ಲಾಧಿಕಾರಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಪ್ರಾಥಮಿಕ ಮೀನುಗಾರಿಕೆ ಸಹಕಾರ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.